ADVERTISEMENT

ಪ್ರಧಾನಿ ನರೇಂದ್ರ ಮೋದಿ ಯುವಜನರ ಕ್ಷಮೆ ಕೋರಲಿ: ಡಿಕೆಶಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 3:42 IST
Last Updated 25 ಡಿಸೆಂಬರ್ 2019, 3:42 IST
ಡಿ.ಕೆ.ಶಿವಕುಮಾರ್‌
ಡಿ.ಕೆ.ಶಿವಕುಮಾರ್‌   

ಬೆಂಗಳೂರು: ತಮ್ಮ ವಿರುದ್ಧ ಧ್ವನಿ ಎತ್ತಿದ ಯುವಕರು, ವಿದ್ಯಾರ್ಥಿಗಳು, ಬುದ್ಧಿಜೀವಿಗಳನ್ನು ನಗರ ನಕ್ಸಲರು ಎಂದು ಕರೆದು ಅವಮಾನ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಈ ಕೂಡಲೇ ಕ್ಷಮೆ ಯಾಚಿಸಬೇಕು ಎಂದು ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ದೇಶದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ ಹಾಗೂ ಎನ್‌ಸಿಆರ್‌ವಿರುದ್ಧ ಯುವಕರು, ವಿದ್ಯಾರ್ಥಿಗಳು ಪ್ರತಿಭಟನೆಗಳನ್ನು ಮಾಡುತ್ತಿದ್ದಾರೆ. ವಿದ್ಯಾರ್ಥಿಗಳು, ಬುದ್ಧಿಜೀವಿಗಳು, ವಿದ್ಯಾವಂತರು ಯಾವುದೇ ಪಕ್ಷಕ್ಕೆ ಸೇರಿದವರಲ್ಲ, ಯಾವುದೇ ಪಕ್ಷದ ಸದಸ್ಯರೂ ಅಲ್ಲ. ಯಾವ ಪಕ್ಷವೂ ಈ ರೀತಿ ಮಾಡಿ ಅಂತಾ ನಿರ್ದೇಶನ ಕೊಟ್ಟಿಲ್ಲ. ಕಾಂಗ್ರೆಸ್ ಸೇರಿ ವಿವಿಧ ಪಕ್ಷಗಳು ತಮ್ಮದೇ ಆದ ರೀತಿಯಲ್ಲಿ ಪ್ರತ್ಯೇಕವಾಗಿ ಪ್ರತಿಭಟನೆ ಮಾಡುತ್ತಿವೆ. ಪ್ರಧಾನಿ ಅವರು ಇಂತಹ ಹೋರಾಟಗಾರರನ್ನುನಗರ ನಕ್ಸಲರು ಎಂದು ಕರೆದು ಅವಮಾನಿಸಿದ್ದು, ದೊಡ್ಡ ದೇಶದ್ರೋಹ’ ಎಂದರು.

‘ವಿದೇಶಿಯರು ಭಾರತದಲ್ಲಿ ಹೂಡಿಕೆಗೆ ಹಿಂದೇಟು ಹಾಕುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಿಎಎ ಅನ್ನು ಎಲ್ಲ ದೇಶಗಳು ವಿರೋಧಿಸುತ್ತಿವೆ. ಎನ್‌ಡಿಎ ಬೆಂಬಲಿಗ ಪಕ್ಷಗಳೇ ವಿರೋಧಿಸುತ್ತಿವೆ. ನೀವು ಮೊದಲು ಅವರನ್ನು ಸಮಾಧಾನ ಮಾಡಿ’ ಎಂದು ಸಲಹೆ ಮಾಡಿದರು.

ADVERTISEMENT

‘ಮಂಗಳೂರಿನ ಯಾವುದೇ ಪೊಲೀಸ್ ಅಧಿಕಾರಿಯನ್ನು ದೂಷಿಸುವುದಿಲ್ಲ. ವ್ಯವಸ್ಥೆ ಹೇಗೆ ಕಾರ್ಯನಿರ್ವಹಿಸುತ್ತದೆ ಅಂತಾ ನನಗೆ ಗೊತ್ತಿದೆ. ಸರ್ಕಾರದ ಆದೇಶವಿಲ್ಲದೇ ಯಾವುದೇ ಅಧಿಕಾರಿ ಈ ನಿರ್ಧಾರ ಕೈಗೊಳ್ಳುವುದಿಲ್ಲ. ಮಂಗಳೂರಿನ ಘಟನೆಗೆ ಸರ್ಕಾರವೇ ಹೊಣೆ’ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.