ADVERTISEMENT

ಇಸ್ರೊ ಯೋಜನೆ ಸ್ಥಳಾಂತರಿಸದಂತೆ ಡಿಕೆಶಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2021, 16:34 IST
Last Updated 28 ನವೆಂಬರ್ 2021, 16:34 IST
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್   

ಬೆಂಗಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್‌ಗೆ ಸ್ಥಳಾಂತರಿಸುವ ಪ್ರಸ್ತಾವ ಕೈಬಿಡುವಂತೆ ಆಗ್ರಹಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪತ್ರ ಬರೆದಿದ್ದಾರೆ.

‘ಇಸ್ರೊ ಕೇಂದ್ರ ಕಚೇರಿಯನ್ನು ಹೊಂದಿರುವ ಬೆಂಗಳೂರಿನಲ್ಲಿ ಮಾನವಸಹಿತ ಗಗನಯಾನ ಯೋಜನೆಗಾಗಿ 2007 ರಿಂದಲೂ ಸಿದ್ಧತೆ ನಡೆಯುತ್ತಿದೆ. 2023ರಲ್ಲಿ ಮಾನವಸಹಿತ ಗಗನಯಾನ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಈ ಯೋಜನೆಯನ್ನು ಗುಜರಾತ್‌ಗೆ ಸ್ಥಳಾಂತರಿಸುವ ಪ್ರಸ್ತಾವವಿದೆ ಎಂಬ ಸುದ್ದಿ ಕನ್ನಡಿಗರಿಗೆ ಬೇಸರ ಉಂಟುಮಾಡಿದೆ’ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

ಈ ಯೋಜನೆಯನ್ನು ಗುಜರಾತ್‌ಗೆ ಸ್ಥಳಾಂತರಿಸಿದರೆ ಅದು ಒಕ್ಕೂಟ ವ್ಯವಸ್ಥೆಗೆ ಬಗೆಯುವ ದ್ರೋಹ. ಇಂತಹ ಪ್ರಕ್ರಿಯೆ ಕನ್ನಡಿಗರ ಸ್ವಾಭಿಮಾನ ಮತ್ತು ಆತ್ಮಗೌರವಕ್ಕೆ ಧಕ್ಕೆ ತರಲಿದೆ. ಆದ್ದರಿಂದ, ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಸ್ಥಳಾಂತರಿಸುವ ಪ್ರಸ್ತಾವ ಕೈಬಿಡಬೇಕು. ನಗರದಿಂದಲೇ ಯೋಜನೆ ಕಾರ್ಯರೂಪಕ್ಕೆ ಬರುವಂತೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ADVERTISEMENT

ಮುಖ್ಯಮಂತ್ರಿಯವರಿಗೆ ಪ್ರತ್ಯೇಕ ಪತ್ರ ಬರೆದಿರುವ ಶಿವಕುಮಾರ್‌, ‘ಈ ವಿಷಯದಲ್ಲಿ ರಾಜ್ಯದ ಮುಖಂಡರ ನಿಯೋಗವೊಂದನ್ನು ದೆಹಲಿಗೆ ಕರೆದೊಯ್ದು ಪ್ರಧಾನಿಯವರ ಮೇಲೆ ಒತ್ತಡ ಹೇರಬೇಕು. ಯೋಜನೆ ಸ್ಥಳಾಂತರದ ಪ್ರಸ್ತಾವ ಕೈಬಿಡುವಂತೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.