ಬೆಂಗಳೂರು: ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಭೇಟಿ ಕುರಿತ ಹೇಳಿಕೆಯಿಂದ ಮುನಿಸಿಕೊಂಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಪ್ರದೇಶ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ ಉದಯಪುರದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಚಿಂತನ ಶಿಬಿರದಲ್ಲಿ ನಗುತ್ತಾ ಕುಶಲೋಪರಿ ನಡೆಸಿದ್ದಾರೆ.
‘ಸಚವ ಅಶ್ವತ್ಥ ನಾರಾಯಣ ತಮ್ಮ ಸ್ವಯಂ ರಕ್ಷಣೆಗಾಗಿ ಎಂ.ಬಿ. ಪಾಟೀಲ ಅವರನ್ನು ಭೇಟಿಮಾಡಿದ್ದಾರೆ’ ಎಂದು ಶಿವಕುಮಾರ್ ಹೇಳಿಕೆ ನೀಡಿದ್ದರು. ಅಶ್ವತ್ಥ ನಾರಾಯಣ ಮತ್ತು ಪಾಟೀಲ ಇಬ್ಬರೂ ಭೇಟಿಯನ್ನು ನಿರಾಕರಿಸಿದ್ದರು. ಶಿವಕುಮಾರ್ ಹೇಳಿಕೆ ಕುರಿತು ಪಾಟೀಲ ಬಹಿರಂಗವಾಗಿಯೇ ಅಸಮಾಧಾನ ವ್ಯಕ್ತಪಡಿಸಿದ್ದರು. ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುವುದಾಗಿಯೂ ಹೇಳಿದ್ದರು.
ರಾಜಸ್ಥಾನದ ಉದಯಪುರದಲ್ಲಿ ಶುಕ್ರವಾರದಿಂದ ಆರಂಭವಾದ ‘ಕಾಂಗ್ರೆಸ್ ಚಿಂತನ ಶಿಬಿರ’ದಲ್ಲಿ ಇಬ್ಬರೂ ನಾಯಕರು ಮುಖಾಮುಖಿಯಾಗಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೂಡ ಈ ಸಂದರ್ಭದಲ್ಲಿ ಜತೆಗಿದ್ದರು.
ಶಿವಕುಮಾರ್ ಮತ್ತು ಎಂ.ಬಿ. ಪಾಟೀಲ ನಗುತ್ತಾ ಮಾತುಕತೆಯಲ್ಲಿ ತೊಡಗಿರುವುದು, ತಬ್ಬಿಕೊಂಡಿರುವ ಫೋಟೊಗಳನ್ನು ಕೆಪಿಸಿಸಿಯ ಅಧಿಕೃತ ಸಾಮಾಜಿಕ ಮಾಧ್ಯಮ ಗುಂಪುಗಳಲ್ಲಿ ಹಂಚಿಕೊಂಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.