ಬೆಂಗಳೂರು:ಅಕ್ರಮ ಹಣಕ್ಕೆ ಸಂಬಂಧಪಟ್ಟಂತೆಜಾರಿ ನಿರ್ದೇಶನಾಲಯ (ಇ.ಡಿ) ಶುಕ್ರವಾರಸತತ 5 ತಾಸುಗಳವರೆಗೆ ಡಿ.ಕೆ.ಶಿವಕುಮಾರ್ ಅವರ ವಿಚಾರಣೆ ನಡೆಸಿ, ಶನಿವಾರ 11ಕ್ಕೆಮತ್ತೆ ಬರುವಂತೆ ತಿಳಿಸಿದ್ದಾರೆ.
ಸಂಜೆ 4.45ಕ್ಕೆ ದೆಹಲಿ ತಲುಪಿದ ಶಿವಕುಮಾರ್ ಅಲ್ಲಿಂದ ನೇರವಾಗಿ ಕರ್ನಾಟಕ ಭವನಕ್ಕೆ ಬಂದರು. ವಕೀಲರ ಅಭಿಪ್ರಾಯ ಪಡೆಯುವ ಸಲುವಾಗಿ ಅಲ್ಲಿಂದ ಕೂಡಲೇ ಸಂಸದ ಡಿ.ಕೆ. ಸುರೇಶ ಅವರ ನಿವಾಸಕ್ಕೆ ತೆರಳಿದ ಅವರು, ಅರ್ಧ ಗಂಟೆ ಚರ್ಚೆ ನಡೆಸಿ ವಿಚಾರಣೆಗಾಗಿ ಲೋಕ ಕಲ್ಯಾಣ ಭವನದತ್ತ ಧಾವಿಸಿದರು. ರಾತ್ರಿ 11.50ರವರೆಗೆ ವಿಚಾರಣೆ ನಡೆಯಿತು.
‘ಶನಿವಾರ ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಹೇಳಿದ್ದಾರೆ. ನಾನು ಅವರಿಗೆ ಸಂಪೂರ್ಣ ಸಹಕಾರ ನೀಡುತ್ತೇನೆ’ ಎಂದು ಡಿ.ಕೆ.ಶಿವಕುಮಾರ್ ವಿಚಾರಣೆ ನಂತರ ತಿಳಿಸಿದರು.
ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ದೆಹಲಿಯಲ್ಲಿನ ಇ.ಡಿ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಗುರುವಾರ ರಾತ್ರಿ 9.40ಕ್ಕೆ ಇ.ಡಿ ಅಧಿಕಾರಿಗಳು ಸಮನ್ಸ್ ನೀಡಿದ್ದರು.
ನೋಟು ರದ್ದತಿ ವೇಳೆ ಆದಾಯ ಇಲಾಖೆ ಅಧಿಕಾರಿಗಳು ₹ 8.60 ಕೋಟಿ ಅಕ್ರಮ ಹಣ ವಶಕ್ಕೆ ಪಡೆದ ಪ್ರಕರಣದಲ್ಲಿ ಇ.ಡಿ ಶಿವಕುಮಾರ್ ಅವರಿಗೆ ಸಮನ್ಸ್ ನೀಡಿತ್ತು.ಇ.ಡಿ. ನೀಡಿದ್ದ ಸಮನ್ಸ್ ರದ್ದುಪಡಿಸುವಂತೆ ಶಿವಕುಮಾರ್ ಅವರು ಸಲ್ಲಿಸಿದ್ದ ಮನವಿಯನ್ನು ರಾಜ್ಯ ಹೈಕೋರ್ಟ್ ರದ್ದುಪಡಿಸಿತ್ತು.
ಶಿವಕುಮಾರ್ ಹಾಗೂ ಅವರ ಆಪ್ತರ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣ ಕುರಿತು ಇ.ಡಿ, ದೆಹಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದು, ಆರೋಪಿಗಳನ್ನು ಬಂಧಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.