ಬೆಂಗಳೂರು: ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರುವ ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಡಿ.ವಿ. ಸದಾನಂದ ಗೌಡ ಅವರನ್ನು ಸೋಮವಾರ ಭೇಟಿ ಮಾಡಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಆರೋಗ್ಯದ ಸ್ಥಿತಿ ಕುರಿತು ವಿಚಾರಿಸಿದರು.
ಶಿವಮೊಗ್ಗದಲ್ಲಿ ನಡೆದ ಬಿಜೆಪಿ ರಾಜ್ಯ ಘಟಕದ ಪದಾಧಿಕಾರಿಗಳ ಸಭೆಯಲ್ಲಿ ಭಾಗವಹಿಸಿ ಭಾನುವಾರ ಮಧ್ಯಾಹ್ನ ಹಿಂದಿರುಗುತ್ತಿದ್ದ ಸದಾನಂದ ಗೌಡ ಅವರು ಚಿತ್ರದುರ್ಗದಲ್ಲಿ ಅಸ್ವಸ್ಥರಾಗಿದ್ದರು. ತಕ್ಷಣ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಆಂಬುಲೆನ್ಸ್ ಮೂಲಕ ನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.
ಸೋಮವಾರ ಬೆಳಿಗ್ಗೆ ಆಸ್ಪತ್ರೆಗೆ ಭೇಟಿನೀಡಿದ ಯಡಿಯೂರಪ್ಪ ಅವರು ಸದಾನಂದ ಗೌಡರ ಯೋಗಕ್ಷೇಮ ವಿಚಾರಿಸಿದರು. ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಜತೆಗಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.