
ಮಹದೇವಸ್ವಾಮಿ ಎಂ. ಚಿದರವಳ್ಳಿ
ಬೆಂಗಳೂರು: ನಾಯಕತ್ವ ಬದಲಾವಣೆಯ ವೇಳೆ ಪರಿಶಿಷ್ಟ ಜಾತಿಗೆ ಮುಖ್ಯಮಂತ್ರಿ ಸ್ಥಾನ ನೀಡುವಂತೆ ಆಗ್ರಹಿಸಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಲು ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘ ಮತ್ತು ಕೆಲವು ದಲಿತ ಸಂಘಟನೆಗಳ ನಾಯಕರು ನಿರ್ಧರಿಸಿದ್ದಾರೆ.
ಈ ಕುರಿತು ಮಾತನಾಡಿದ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಸ್ವಾಮಿ ಎಂ. ಚಿದರವಳ್ಳಿ, ‘ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಈಗಾಗಲೇ ನಾವು ಮನವಿ ಸಲ್ಲಿಸಿದ್ದೇವೆ. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕರಾದ ಕೆ.ಸಿ. ವೇಣುಗೋಪಾಲ್ ಮತ್ತು ರಣದೀಪ್ ಸಿಂಗ್ ಸುರ್ಜೇವಾಲಾ ಅವರನ್ನೂ ಭೇಟಿ ಮಾಡಿ ಹಕ್ಕೊತ್ತಾಯ ಮಂಡಿಸುತ್ತೇವೆ’ ಎಂದರು.
‘ಕಾಂಗ್ರೆಸ್ ಪಕ್ಷ 2013ರಲ್ಲಿ ಅಧಿಕಾರಕ್ಕೆ ಬರಲು ಕಾರಣರಾದವರಲ್ಲಿ ಜಿ. ಪರಮೇಶ್ವರ ಅವರೂ ಪ್ರಮುಖರು. ಎಂಟು ವರ್ಷ ಕೆಪಿಸಿಸಿ ಅಧ್ಯಕ್ಷರಾಗಿದ್ದ ಅವರಿಗೆ ಪಕ್ಷವನ್ನು ಬಲವಾಗಿ ಸಂಘಟಿಸಿದ್ದಾರೆ. ಅವರ ಶ್ರಮದಿಂದ, ಸಿದ್ದರಾಮಯ್ಯ ಮುಖ್ಯಮಂತ್ರಿ ಪಟ್ಟ ಏರಿದ್ದಾರೆ. ಸಿದ್ದರಾಮಯ್ಯ ಅವರಿಂದ ತೆರವಾಗುವ ಸ್ಥಾನವನ್ನು ಪರಮೇಶ್ವರ ಅವರಿಗೆ ನೀಡುವುದು ಸೂಕ್ತ. ಎಚ್.ಸಿ. ಮಹದೇವಪ್ಪ ಅವರಿಗೂ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ’ ಎಂದಿದ್ದಾರೆ.
‘ಪರಿಶಿಷ್ಟ ಸಮುದಾಯದ ಬೆನ್ನಿಗೆ ನಿಂತ ಕಾರಣ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿದೆ. ಹೀಗಾಗಿ, ಪರಿಶಿಷ್ಟ ಜಾತಿಯವರೊಬ್ಬರನ್ನು ಮುಖ್ಯಮಂತ್ರಿ ಮಾಡಲೇಬೇಕೆಂದು ಒತ್ತಡ ಹೇರಲು ಎಲ್ಲ ದಲಿತ ಸಂಘಟನೆಗಳ ನಾಯಕರು ಶೀಘ್ರದಲ್ಲಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡುತ್ತೇವೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.