ADVERTISEMENT

ಪರಮೇಶ್ವರ ನೇತೃತ್ವದಲ್ಲಿ ಸಚಿವರ ಸಭೆ: ‘ದಲಿತ ಸಿಎಂ’ ಹಕ್ಕು ಮಂಡನೆ ಬಗ್ಗೆ ಚರ್ಚೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2026, 9:12 IST
Last Updated 4 ಫೆಬ್ರುವರಿ 2026, 9:12 IST
<div class="paragraphs"><p>ಜಿ. ಪರಮೇಶ್ವರ</p></div>

ಜಿ. ಪರಮೇಶ್ವರ

   

ಬೆಂಗಳೂರು: ದಲಿತ ಸಚಿವರು ಸೇರಿದಂತೆ 20ಕ್ಕೂ ಹೆಚ್ಚು ಮಂದಿ ಗೃಹ ಸಚಿವ ಜಿ. ಪರಮೇಶ್ವರ ನೇತೃತ್ವದಲ್ಲಿ ಮಂಗಳವಾರ ರಾತ್ರಿ ಸಭೆ ಸೇರಿರುವುದು ಕಾಂಗ್ರೆಸ್‌ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಕಾಂಗ್ರೆಸ್‌ ಹೈಕಮಾಂಡ್ ಮುಂದೆ ‘ದಲಿತ ಮುಖ್ಯಮಂತ್ರಿ’ ಹಕ್ಕು ಮಂಡನೆಯ ಕುರಿತು ಈ ಸಭೆಯಲ್ಲಿ ಚರ್ಚೆ ನಡೆದಿದೆ ಎಂದು ಗೊತ್ತಾಗಿದೆ.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಥಾನ ತ್ಯಜಿಸುವ ಸಂದರ್ಭ ಬಂದರೆ ದಲಿತರೊಬ್ಬರನ್ನು ಆ ಸ್ಥಾನಕ್ಕೆ ಪರಿಗಣಿಸುವಂತೆ ಒತ್ತಡ ಹಾಕುವ ಬಗ್ಗೆಯೂ ಸಭೆಯಲ್ಲಿ ವಿಚಾರ ವಿನಿಮಯ ನಡೆದಿದೆ ಎನ್ನಲಾಗಿದೆ.

ಎಸ್‌ಸಿಎಸ್‌ಪಿ ಟಿಎಸ್‌ಪಿ ಅನುದಾನ ಬಳಕೆ, ಬಜೆಟ್‌ನಲ್ಲಿ ದಲಿತ ಸಮುದಾಯಕ್ಕೆ ವಿಶೇಷ ಅನುದಾನ ಮೀಸಲಿಡಬೇಕೆಂದು ಒತ್ತಾಯಿಸುವ ಬಗ್ಗೆಯೂ ಈ ಸಭೆಯಲ್ಲಿ ಚರ್ಚೆ ನಡೆದಿದೆ.

ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಎಚ್. ಮುನಿಯಪ್ಪ, ಶಿವರಾಜ್ ತಂಗಡಗಿ, ಶಾಸಕ ಕೆ.ಎನ್. ರಾಜಣ್ಣ ಮುಂತಾದವರು ಸಭೆಯಲ್ಲಿ ಇದ್ದರು.

ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪದೇ ಪದೇ ಅಧಿಕಾರ ಹಂಚಿಕೆ ವಿಷಯ ಪ್ರಸ್ತಾಪಿಸುತ್ತಿದ್ದು, ಇದಕ್ಕೆ ಬ್ರೇಕ್ ಹಾಕಲು ಸಿದ್ದರಾಮಯ್ಯ ಅವರು ದಲಿತ ನಾಯಕರನ್ನು ಮುಂದೆ ಬಿಟ್ಟು 'ದಲಿತ ಮುಖ್ಯಮಂತ್ರಿ' ಚರ್ಚೆಯನ್ನು ಮುನ್ನಲೆಗೆ ತಂದಿದ್ದಾರೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.