
ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮಿ
ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ್ದ ಪ್ರಕರಣದಲ್ಲಿ ಆಟೊ ಚಾಲಕ ಹಾಗೂ ಟೆಕಿಯನ್ನು ಸೈಬರ್ ಅಪರಾಧ ಠಾಣೆ ಪೊಲೀಸರು ಬಂಧಿಸಿದ್ದಾರೆ.
ದೂರು ನೀಡಿ ವಾರ ಕಳೆದರೂ ಆರೋಪಿಗಳ ಬಂಧನವಾಗಿಲ್ಲ ಎಂದು ವಿಜಯಲಕ್ಷ್ಮಿ ಅವರು ಅಸಮಾಧಾನ ಹೊರಹಾಕಿದ್ದರು.
'ಈ ದೇಶದಲ್ಲಿ ಕಾನೂನು ಎಲ್ಲರಿಗೂ ಒಂದೇ. ಕೆಲವರು ದೂರು ನೀಡಿದ ಮರುದಿನವೇ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಆದರೆ, ನಾನು ನೀಡಿದ ದೂರನ್ನು ನಿರ್ಲಕ್ಷ್ಯ ಮಾಡಲಾಗಿದೆ' ಎಂದು ಆರೋಪಿಸಿದ್ದರು. ನಗರ ಪೊಲೀಸ್ ಕಮಿಷನರ್ ಸೀಮಾಂತ್ಕುಮಾರ್ ಸಿಂಗ್ ಅವರನ್ನೂ ಬುಧವಾರ ಭೇಟಿ ಮಾಡಿದ್ದರು. ಅದರ ಬೆನ್ನಲ್ಲೇ ಇಬ್ಬರ ಬಂಧನವಾಗಿದೆ.
ಚಿಕ್ಕಬಾಣಾವರದ ನಿವಾಸಿ, ಆಟೊ ಚಾಲಕ ಚಂದ್ರಶೇಖರ್ (45) ಹಾಗೂ ದಾವಣಗೆರೆಯ ನಿವಾಸಿ ನಿತಿನ್ ಬಂಧಿತರು.
ನಿತಿನ್ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರೂ ಇನ್ಸ್ಟಾಗ್ರಾಮ್ ಹಾಗೂ ಫೇಸ್ಬುಕ್ ಮೂಲಕ ಅಶ್ಲೀಲ ಸಂದೇಶ ಕಳುಹಿಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.