ನವದೆಹಲಿ: ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿರುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಕೆಯಾಗಿದೆ. ಅರ್ಜಿಯ ವಿಚಾರಣೆಗೆ ಕೋರ್ಟ್ ಒಪ್ಪಿದೆ.
ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಹಾಗೂ ನ್ಯಾಯಮೂರ್ತಿ ಕೆ. ವಿನೋದ್ ಚಂದ್ರ ಅವರ ಪೀಠದ ಮುಂದೆ ಅರ್ಜಿಯ ವಿಚಾರಣೆ ಬಂತು. ಸೆಪ್ಟೆಂಬರ್ 22 ರಂದು ಹಬ್ಬ ಪ್ರಾರಂಭವಾಗುವುದರಿಂದ ತುರ್ತು ವಿಚಾರಣೆಗೆ ಅರ್ಜಿದಾರರು ಕೋರಿದರು. ಇದನ್ನು ಮಾನ್ಯ ಮಾಡಿದ ಕೋರ್ಟ್ ನಾಳೆ (ಸೆಪ್ಟೆಂಬರ್ 19) ವಿಚಾರಣೆಗೆ ಪಟ್ಟಿ ಮಾಡಿದೆ.
‘ಸೆಪ್ಟೆಂಬರ್ 22ರಂದು ಹಿಂದೂಯೇತರ ವ್ಯಕ್ತಿಯೊಬ್ಬರಿಗೆ ಕರ್ನಾಕದ ಮೈಸೂರು ದೇಗುಲದಲ್ಲಿ ಚಾಮುಂಡೇಶ್ವರಿ ಉತ್ಸವಕ್ಕೂ ಮುನ್ನ ನಡೆಸುವ ಅಗ್ರ ಪೂಜೆ ನಡೆಸಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ ಅರ್ಜಿಯನ್ನು ವಿಚಾರಣೆಗೆ ಪರಿಗಣಿಸಬೇಕು’ ಎಂದು ಅರ್ಜಿದಾರರ ಪರ ವಕೀಲರು ಭಿನ್ನವಿಸಿಕೊಂಡರು. ಇದಕ್ಕೆ ಸಿಜೆಐ ಒಪ್ಪಿದರು.
ಬಾನು ಮುಷ್ತಾಕ್ ಅವರು ದಸರಾ ಉದ್ಘಾಟಿಸುವುದನ್ನು ವಿರೋಧಿ ಬಿಜೆಪಿ ನಾಯಕ ಪ್ರತಾಪ ಸಿಂಹ ಸೇರಿದಂತೆ ಹಲವು ಮಂದಿ ಸಲ್ಲಿಸಿದ್ದ ಪಿಐಎಲ್ ಅನ್ನು ಸೆಪ್ಟೆಂಬರ್ 15ರಂದು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.