ADVERTISEMENT

ದತ್ತಪೀಠ ಬಾಬಾಬುಡನ್ ದರ್ಗಾ ವಿವಾದ ಶಾಶ್ವತವಾಗಿ ಬಗೆಹರಿಸಲು ಚಿಂತನೆ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 17 ಜನವರಿ 2025, 10:34 IST
Last Updated 17 ಜನವರಿ 2025, 10:34 IST
<div class="paragraphs"><p>ಪರಮೇಶ್ವರ ನೇತೃತ್ವದಲ್ಲಿ ಸಭೆ</p></div>

ಪರಮೇಶ್ವರ ನೇತೃತ್ವದಲ್ಲಿ ಸಭೆ

   

ಬೆಂಗಳೂರು: ಚಿಕ್ಕಮಗಳೂರಿನ ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್‌ಗಿರಿ ದರ್ಗಾ ವಿವಾದವನ್ನು ಶಾಶ್ವತವಾಗಿ ಬಗೆಹರಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಸಲ್ಲಿಕೆಯಾಗಿರುವ ವಿಶೇಷ ಅರ್ಜಿಯ ಕುರಿತು ಪರಮೇಶ್ವರ ಅವರು ಚಿಕ್ಕಮಗಳೂರು ಜಿಲ್ಲೆಯ ಶಾಸಕರು, ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರುಗಳೊಂದಿಗೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಶುಕ್ರವಾರ ಸಮಾಲೋಚನಾ ಸಭೆ ನಡೆಸಿದರು.

ADVERTISEMENT

‘ದಾಖಲೆಗಳು ಶಾಶ್ವತವಾಗಿ ಇರುವಂತಹವು.‌ ಈ ವಿಚಾರದಲ್ಲಿ ಕಾನೂನಿನ ಸಲಹೆ ಪಡೆಯಬೇಕಾಗುತ್ತದೆ. ಕರ್ನಾಟಕಕ್ಕೆ ದೇಶದಲ್ಲಿ ಒಳ್ಳೆಯ ಹೆಸರಿದೆ. ಈ ಸಮಸ್ಯೆಯನ್ನು ಹೆಚ್ಚು ದಿನ ಮುಂದಕ್ಕೆ ತೆಗೆದುಕೊಂಡು ಹೋಗುವುದಿಲ್ಲ. ಶಾಂತಿ ಸಾಮರಸ್ಯ ನೆಲೆಸುವಂತೆ‌ ಮಾಡಬೇಕು. ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಬೇಕು ಎಂದು ಸರ್ಕಾರ ತೀರ್ಮಾನ ಮಾಡಿದೆ’ ಎಂದು ಅವರು ಸಭೆಯಲ್ಲಿ ತಿಳಿಸಿದರು.

ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಂದ್ರದೋಣ ಪರ್ವತದಲ್ಲಿರುವ ದತ್ತಾತ್ರೇಯ ಬಾಬಾ ಬುಡನ್‌ಗಿರಿ ದರ್ಗಾ ಕರ್ನಾಟಕದಲ್ಲಿ ಭಾವೈಕ್ಯತೆಯ ಸ್ಥಳ. 1975ರವರೆಗೆ ಒಂದು ರೀತಿಯ ಕಾರ್ಯಕ್ರಮಗಳು ನಡೆದರೆ, ತದನಂತರದ ದಿನಗಳಲ್ಲಿ ಅನೇಕ ಗೊಂದಲಗಳನ್ನು ಕಂಡಿದ್ದೇವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಅನೇಕ ಪ್ರಯತ್ನಗಳನ್ನು ಮಾಡಿದೆ. ಹಿಂದು, ಮುಸ್ಲಿಂ ಸಮುದಾಯದವರು ಕೋರ್ಟ್ ಮೆಟ್ಟಿಲು ಹತ್ತಿದ್ದಾರೆ. ಸಮಿತಿ, ಸಚಿವ ಸಂಪುಟ ಉಪ ಸಮಿತಿಗಳನ್ನು ರಚಿಸಿ ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್‌ಗೆ ತಿಳಿಸಲಾಗಿದ್ದು, ತೀರ್ಪುಗಳು ಬಂದಿವೆ. ಕೆಲವರು ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದಾರೆ ಎಂದರು‌.

‘ನಮ್ಮ ಸರ್ಕಾರವು ದತ್ತಾತ್ರೇಯ ಬಾಬಾ ಬುಡನ್‌ಗಿರಿ ದರ್ಗಾ ಗೊಂದಲವನ್ನು ಬಗೆಹರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ಸಂಪುಟ ಉಪ ಸಮಿತಿ ರಚಿಸಿದ್ದಾರೆ. ಈವರೆಗೆ ನಾಲ್ಕು ಸಭೆಗಳನ್ನು ನಡೆಸಿ, ಅನೇಕ ದಾಖಲೆಗಳನ್ನು ಪರಿಶೀಲಿಸಿ ದಾವೆಗೆ ಬೇಕಾದ ಮಾಹಿತಿಗಳನ್ನು ಕೋರ್ಟ್‌ಗೆ ನೀಡಲಾಗಿದೆ’ ಎಂದು ಹೇಳಿದರು.

ಮಾರ್ಚ್ 24ರೊಳಗೆ ಸರ್ಕಾರದ ಅಭಿಪ್ರಾಯ ತಿಳಿಸುವಂತೆ ಜನವರಿ 7ರಂದು ಸುಪ್ರಿಂಕೋರ್ಟ್ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳು, ಧಾರ್ಮಿಕ ಮುಖಂಡರೊಂದಿಗೆ ಸಮಾಲೋಚನೆ ನಡೆಸಿ, ಎಲ್ಲರ ಅಭಿಪ್ರಾಯ ಮತ್ತು ಸಲಹೆಗಳನ್ನು ಪಡೆದುಕೊಳ್ಳಲಾಗಿದೆ. ಮುಂದಿನ ವಾರ ಸಚಿವ ಸಂಪುಟ ಉಪ‌ಸಮಿತಿ ಸಭೆ ಕರೆದು ಜನಪ್ರತಿನಿಧಿಗಳು ಹಾಗೂ ಧಾರ್ಮಿಕ ಮುಖಂಡರು ತಿಳಿಸಿರುವ ಸಲಹೆಗಳನ್ನು ಮತ್ತು ದಾಖಲೆಗಳನ್ನು ಪರಿಶೀಲಿಸಿ ಕೋರ್ಟ್‌ಗೆ ತಿಳಿಸುತ್ತೇವೆ. ಅದಾದ ನಂತರ ಕೋರ್ಟ್‌ನಿಂದ ಬರುವ ತೀರ್ಮಾನದಂತೆ ನಡೆದುಕೊಳ್ಳೋಣ ಎಂದು ಹೇಳಿದರು.

ಸಭೆಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ, ಇಂಧನ ಸಚಿವ ಕೆ.ಜೆ.ಜಾರ್ಜ್, ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ, ವಸತಿ ಮತ್ತು ವಕ್ಫ್ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂಸದ ಕೋಟಾ ಶ್ರೀನಿವಾಸ ಪೂಜಾರಿ, ಶಾಸಕರಾದ ಹೆಚ್.ಡಿ.ತಮ್ಮಯ್ಯ, ನಯನಾ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ಧಾರ್ಮಿಕ ಮುಖಂಡರು, ಚಿಕ್ಕಮಗಳೂರು ಜಿಲ್ಲೆಯ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.