ADVERTISEMENT

ಕೋವಿಡ್‌ ಪರಿಸ್ಥಿತಿ, ನಿರ್ವಹಣೆ ಬಗ್ಗೆ ರಾಜ್ಯಪಾಲರಿಗೆ ಅಶ್ವತ್ಥನಾರಾಯಣ ಮಾಹಿತಿ 

​ಪ್ರಜಾವಾಣಿ ವಾರ್ತೆ
Published 27 ಮೇ 2021, 11:28 IST
Last Updated 27 ಮೇ 2021, 11:28 IST
ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ   

ಬೆಂಗಳೂರು: ರಾಜ್ಯಪಾಲ ವಜುಭಾಯ್‌ ವಾಲಾ ಅವರನ್ನು ಗುರುವಾರ ಭೇಟಿ ಮಾಡಿದ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ ಅಶ್ವತ್ಥನಾರಾಯಣ, ರಾಜ್ಯದಲ್ಲಿನ ಕೋವಿಡ್‌ ಪರಿಸ್ಥಿತಿ ಹಾಗೂ ನಿರ್ವಹಣೆ ಬಗ್ಗೆ ಅವರಿಗೆ ಮಾಹಿತಿ ನೀಡಿದರು.

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಜೊತೆ 1.30ಕ್ಕೆ ರಾಜಭವನಕ್ಕೆ ತೆರಳಿದ ಡಾ.ಅಶ್ವತ್ಥನಾರಾಯಣ, ‘ಸೋಂಕು ತಡೆಗಟ್ಟಲು ಲಾಕ್‌ಡೌನ್‌ ಸೇರಿದಂತೆ ಈವರೆಗೆ ತೆಗೆದುಕೊಂಡ ಕ್ರಮಗಳು, ಲಸಿಕೆ ಅಭಿಯಾನ, ವೈದ್ಯಕೀಯ ಮೂಲಸೌಕರ್ಯ ಅಭಿವೃದ್ಧಿ, ಸಿಬ್ಬಂದಿ ನೇಮಕ ಸೇರಿದಂತೆ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ರಾಜ್ಯಪಾಲರಿಗೆ ವಿವರ ನೀಡಿದರು.

ಲಾಕ್‌ಡೌನ್‌ ನಂತರ ರಾಜ್ಯದಲ್ಲಿ ಸೋಂಕಿನ ಪಾಸಿಟಿವಿಟಿ ದರವೂ ಕಡಿಮೆಯಾಗಿ ಸಾವಿನ ಪ್ರಮಾಣವೂ ಕಡಿಮೆಯಾಗಿದೆ. ಜೊತೆಗೆ, 45 ವರ್ಷ ಮೀರಿದ ಮುಂಚೂಣಿ ಕಾರ್ಯಕರ್ತರು ಹಾಗೂ ಆದ್ಯತಾ ಗುಂಪಿಗೆ ಲಸಿಕೆ ನೀಡುವ ಕೆಲಸ ನಡೆಯುತ್ತಿದೆ. ರಾಜ್ಯದಾದ್ಯಂತ ಆಮ್ಲಜನಕ, ಔಷಧಿ, ರೆಮ್‌ಡಿಸಿವಿರ್‌ ಕೊರತೆ ನೀಗಿಸಲಾಗಿದೆ’ ಎಂದು ಅಂಕಿ-ಅಂಶಗಳ ಸಹಿತ ರಾಜ್ಯಪಾಲರಿಗೆ ಅವರು ಮಾಹಿತಿ ನೀಡಿದರು.

ADVERTISEMENT

‘ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್‌ಓ ಸೋಂಕಿನ ಬಗ್ಗೆಯೂ ರಾಜ್ಯಪಾಲರಿಗೆ ಮಾಹಿತಿ ನೀಡಿದ ಅವರು, ‘ಈ ಸೋಂಕಿಗೆ ಸಂಬಂಧಿಸಿದ ಔಷಧಿಗಳ ಕೊರತೆ ನಿವಾರಣೆಗೆ ಎಲ್ಲ ಪ್ರಯತ್ನ ನಡೆದಿದೆ. ಕೇಂದ್ರ ಸರ್ಕಾರದ ಜತೆ ಸಂಪರ್ಕದಲ್ಲಿದ್ದು, ಇಡೀ ಸರ್ಕಾರದ ಒಂದು ತಂಡದ ರೂಪದಲ್ಲಿ ಕೆಲಸ ಮಾಡುತ್ತಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.