ADVERTISEMENT

ಗುತ್ತಿಗೆ ವೈದ್ಯರಿಗೆ ಕಾಯಂಗೊಳಿಸುವ ಭರವಸೆ ನೀಡಿದ ಡಿಸಿಎಂ ಅಶ್ವತ್ಥನಾರಾಯಣ

ಕಾಯಂಗೊಳಿಸಲು ಮುಖ್ಯಮಂತ್ರಿ ಜತೆ ಚರ್ಚಿಸುವುದಾಗಿ ಭರವಸೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2020, 11:59 IST
Last Updated 17 ಜೂನ್ 2020, 11:59 IST
ಡಾ. ಸಿ.ಎನ್. ಅಶ್ವತ್ಥನಾರಾಯಣ
ಡಾ. ಸಿ.ಎನ್. ಅಶ್ವತ್ಥನಾರಾಯಣ   

ಬೆಂಗಳೂರು: ಹಲವು ವರ್ಷಗಳಿಂದ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ವೈದ್ಯರು ತಮ್ಮ ಸೇವೆಯನ್ನು ಕಾಯಂ ಮಾಡುವಂತೆ ಒತ್ತಾಯಿಸಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರಿಗೆ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಬುಧವಾರ ಅಶ್ವತ್ಥನಾರಾಯಣ ಅವರನ್ನು ಭೇಟಿಯಾದ ಗುತ್ತಿಗೆ ವೈದ್ಯರು, ‘ಜೀವದ ಹಂಗು ತೊರೆದು ಕೊರೋನಾ ವಾರಿಯರ್ಸ್ ಆಗಿ ಕೆಲಸ ಮಾಡುತ್ತಿರುವ ನಮ್ಮ ಸೇವೆಯನ್ನು ಕೂಡಲೇ ಕಾಯಂ ಮಾಡಬೇಕು’ ಎಂದು ಮನವಿ ಮಾಡಿದರು.

ಅಹವಾಲು ಆಲಿಸಿದ ಬಳಿಕ ಅವರು, ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೆದ ಅಖ್ತರ್ ಜತೆ ಸ್ಥಳದಲ್ಲಿಯೇ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಜತೆ ಮಾತುಕತೆಗೆ ವೇದಿಕೆ ಕಲ್ಪಿಸಿದರು. ಜತೆಗೆ ಸಂಪುಟದಲ್ಲಿಯೂ ಈ ಬಗ್ಗೆ ಚರ್ಚೆ ಮಾಡುವುದಾಗಿಯೂ ಅವರು ವೈದ್ಯರಿಗೆ ಭರವಸೆ ನೀಡಿದರು.

ADVERTISEMENT

ಗುತ್ತಿಗೆ ವೈದ್ಯರು ಹೇಳುವುದೇನು?:‘ಎಂಬಿಬಿಎಸ್ ಮಾಡಿರುವ ನಾವು ಒಟ್ಟು 506 ವೈದ್ಯರು ಗ್ರಾಮೀಣ ಪ್ರದೇಶಗಳ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದೇವೆ. ಈ ಪೈಕಿ 264 ಮಂದಿ ಮೂರು ವರ್ಷಗಳಿಗೂ ಹೆಚ್ಚು ಕಾಲ ಸೇವೆಯನ್ನು ಪೂರ್ಣಗೊಳಿಸಿದ್ದೇವೆ. ಅನೇಕ ವೈದ್ಯರು ಹಳ್ಳಿ ಪ್ರದೇಶಗಳಲ್ಲಿ ಸೇವೆ ಸಲ್ಲಿಸಲು ಮುಂದೆ ಬಾರದಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಿಂದಲೇ ಬಂದಿರುವ ನಾವು ಆ ಪ್ರದೇಶಗಳಲ್ಲಿ ಕೆಲಸ ಮಾಡುತ್ತಿದ್ದೇವೆ’ ಎಂದು ಅವರು ಉಪ ಮುಖ್ಯಮಂತ್ರಿಯವರ ಗಮನ ಸೆಳೆದರು.

ಹಿಂದಿನಿಂದಲೂ ಮೂರು ವರ್ಷ ಸೇವೆ ಮಾಡಿರುವ ಗುತ್ತಿಗೆ ವೈದ್ಯರನ್ನು ಕಾಯಂ ಮಾಡಲಾಗಿದೆ. ಪ್ರವಾಹ, ಬರಗಾಲ, ಕೋವಿಡ್ 19 ಸಮಯದಲ್ಲೂ ಹಿಂಜರಿಯದೇ ಜನರ ಸೇವೆ ಮಾಡಿದ್ದೇವೆ. ಕಾಯಂ ವೈದ್ಯರಷ್ಟೇ ಜವಾಬ್ದಾರಿಯುತವಾಗಿ ನಾವು ಕೆಲಸ ಮಾಡುತ್ತಿದ್ದೇವೆ. ಹೀಗಿದ್ದರೂ ಗುತ್ತಿಗೆ ಆಧಾರಿತ ವೈದ್ಯರ ಸೇವೆಯನ್ನು ಕಾಯಂಗೊಳಿಸುವ ಪ್ರಕ್ರಿಯೆಯನ್ನು ಸರಕಾರ ರದ್ದು ಮಾಡಿದ ಕಾರಣ ನಾವೆಲ್ಲರೂ ಸಾಮೂಹಿಕ ರಾಜೀನಾಮೆಗೆ ಮುಂದಾಗಿದ್ದೇವೆ. ಈ ಹಿಂದೆ ಮಾತುಕತೆಗೆ ಕರೆಯುವಂತೆ ಮಾಡಿದ ಮನವಿಗಳಿಗೆ ಅಧಿಕಾರಿಗಳು ಸ್ಪಂದಿಸಿಲ್ಲ. ಜತೆಗೆ ವೇತನ, ಭತ್ಯೆಗಳನ್ನು ನೀಡುವುದರಲ್ಲಿಯೂ ತೀವ್ರ ತಾರತಮ್ಯ ಎಸಗಲಾಗುತ್ತಿದೆ ಎಂದು ವೈದ್ಯರು ಉಪ ಮುಖ್ಯಮಂತ್ರಿಗಳ ಗಮನಕ್ಕೆ ತಂದರು.

ವೈದ್ಯರು ಹೀಗೆ ರಾಜೀನಾಮೆ ನೀಡುವ ಪ್ರಕ್ರಿಯೆ ಸರಿ ಅಲ್ಲ. ಇಡೀ ರಾಜ್ಯ ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿದೆ. ಇಂತಹ ಕ್ಲಿಷ್ಟಸ್ಥಿತಿಯಲ್ಲಿ ವ್ಯದ್ಯರು ರಾಜೀನಾಮೆಗೆ ಮುಂದಾಗುವುದು ಉತ್ತಮವಲ್ಲ. ಮುಖ್ಯಮಂತ್ರಿ ಆದಿಯಾಗಿ ಪ್ರತಿಯೊಬ್ಬರೂ ಈ ಮಹಾಮಾರಿ ವಿರುದ್ಧ ಸೆಣಸಾಡುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಹೀಗಾಗಿ ಮುಖ್ಯಮಂತ್ರಿಗಳಿಗೆ ನಿಮ್ಮೆಲ್ಲರ ಸಮಸ್ಯೆಗಳನ್ನು ಮನವರಿಕೆ ಮಾಡಲಾಗುವುದು ಎಂದು ಅಶ್ವತ್ಥನಾರಾಯಣ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.