ಬೆಂಗಳೂರು: ತಮ್ಮ ಅನುಮತಿ ಇಲ್ಲದೆ ಲೋಕೋಪಯೋಗಿ ಇಲಾಖೆಯಿಂದ ಜಲಸಂಪನ್ಮೂಲ ಇಲಾಖೆಗೆ ಮುಖ್ಯ ಎಂಜಿನಿಯರ್ಗಳನ್ನು (ಸಿಇ) ವರ್ಗಾವಣೆ ಮಾಡಿ, ಸ್ಥಳ ನಿಯುಕ್ತಿ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ನಡೆಗೆ ಜಲಸಂಪನ್ಮೂಲ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಈ ಆದೇಶವನ್ನು ತಕ್ಷಣ ವಾಪಸ್ ಪಡೆಯಬೇಕು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸೂಚನೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇರ ಅಧೀನದಲ್ಲಿ ಡಿಪಿಎಆರ್ ಕಾರ್ಯನಿರ್ವಹಿಸುತ್ತಿದೆ. ಮುಖ್ಯ ಎಂಜಿನಿಯರ್ಗಳ ವರ್ಗಾವಣೆ ಮತ್ತು ಸ್ಥಳ ನಿಯುಕ್ತಿಗೆ ಸಂಬಂಧಿಸಿದ ಕಡತ ವನ್ನು ಮುಖ್ಯಮಂತ್ರಿಗೆ ಡಿಪಿಎಆರ್ ಕಳುಹಿಸಿತ್ತು. ಮುಖ್ಯಮಂತ್ರಿ ಅನುಮೋದನೆ ನೀಡಿದ ಬಳಿಕ ಐವರು ಮುಖ್ಯ ಎಂಜಿನಿಯರ್ಗಳನ್ನು ಮೇ 9ರಂದು ವರ್ಗಾವಣೆ ಮಾಡಲಾಗಿತ್ತು.
‘ನನ್ನ ಇಲಾಖೆಗೆ ಸಂಬಂಧಿಸಿದಂತೆ ವರ್ಗಾವಣೆ, ನೇಮಕಾತಿ ಮುಂತಾದ ವಿಚಾರಗಳ ಬಗ್ಗೆ ಆದೇಶ ಹೊರಡಿಸುವ ಮೊದಲು ನನ್ನ ಪೂರ್ವಾನುಮತಿ ಪಡೆಯಲೇಬೇಕು’ ಎಂದು ಸರ್ಕಾರ ಅಸ್ತಿತ್ವಕ್ಕೆ ಬಂದ ಆರಂಭದಲ್ಲಿಯೇ ಟಿಪ್ಪಣಿಯ ಮೂಲಕ ಮುಖ್ಯ ಕಾರ್ಯದರ್ಶಿಗೆ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದರು. ಆ ಸೂಚನೆಯನ್ನು ಉಲ್ಲಂಘಿಸಿ ಈ ಆದೇಶ ಹೊರಡಿಸಿರುವುದು ಶಿವಕುಮಾರ್ ಅವರನ್ನು ಕೆರಳಿಸಿದೆ ಎನ್ನಲಾಗಿದೆ.
ಅಂತರ ರಾಜ್ಯ ಜಲವಿವಾದ, ನೀರಾವರಿ ಯೋಜನೆಗಳ ವಲಯ, ಎತ್ತಿನಹೊಳೆ ಯೋಜನಾ ವಲಯ, ಕಾಡಾ ನೀರಾವರಿ ಯೋಜನೆಗಳ ವಲಯ ಮತ್ತು ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ಹುದ್ದೆಗಳಿಗೆ ಈ ಐವರನ್ನು ಸ್ಥಳ ನಿಯುಕ್ತಿಗೊಳಿಸಲಾಗಿತ್ತು.
ಈ ಪೈಕಿ, ಪೊಲೀಸ್ ವಸತಿ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಮುಖ್ಯ ಎಂಜಿನಿಯರ್ ಹುದ್ದೆಯಲ್ಲಿ ಹಾಲಿ ಕರ್ತವ್ಯ ನಿರ್ವಹಿಸುತ್ತಿರುವ ಮುಖ್ಯ ಎಂಜಿನಿಯರ್ ಬಿ.ಎಚ್. ಮಂಜುನಾಥ್ ಅವರು ಮೇ 31ರಂದು ನಿವೃತ್ತಿ ಆಗಲಿದ್ದು, ಅವರಿಂದ ತೆರವಾಗುವ ಹುದ್ದೆಗೆ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಸೂಚನೆ ನೀಡಲಾಗಿತ್ತು. ತನ್ನ ಅಧೀನದಲ್ಲಿರುವ ಇಲಾಖೆಯಲ್ಲಿ ಖಾಲಿ ಇರುವ ಈ ಕೆಲವು ವಿಭಾಗಗಳ ‘ಮುಖ್ಯಸ್ಥ’ರ ಹುದ್ದೆಗಳಿಗೆ ಸ್ಥಳ ನಿಯುಕ್ತಿಗೊಳಿಸುವ ಸಂದರ್ಭದಲ್ಲಿ ಗಮನಕ್ಕೆ ತಾರದ ಡಿಪಿಎಆರ್ನ ಕ್ರಮಕ್ಕೆ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.