ADVERTISEMENT

ಎಸ್‌ಸಿ‌ಪಿ- ಟಿಎಸ್‌ಪಿ ಕ್ರಿಯಾ ಯೋಜನೆ ಸಲ್ಲಿಸಲು ಡಿಸಿಎಂ ಗೋವಿಂದ ಕಾರಜೋಳ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಮೇ 2020, 9:03 IST
Last Updated 12 ಮೇ 2020, 9:03 IST
ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಭೆ ನಡೆಸಿದರು
ಅಧಿಕಾರಿಗಳೊಂದಿಗೆ ಉಪಮುಖ್ಯಮಂತ್ರಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸಭೆ ನಡೆಸಿದರು    

ಬೆಂಗಳೂರು: 2020-21 ನೇ ಸಾಲಿನ ಎಸ್‍ಸಿಎಸ್‍ಪಿ ಮತ್ತು ಟಿಎಸ್‍ಪಿ ಉಪ ಯೋಜನೆಯಡಿ ಎಲ್ಲಾ ಇಲಾಖೆಗಳು ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಇದೇ 20ರೊಳಗೆ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವಂತೆ ಉಪಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಅವರು ಸೂಚಿದರು.

ವಿಕಾಸಸೌಧದಲ್ಲಿ ಮಂಗಳವಾರ 2020-21ನೇ ಸಾಲಿನ ಎಸ್‍ಸಿಪಿ ಮತ್ತು ಎಸ್‍ಟಿಪಿ ಕ್ರಿಯಾ ಯೋಜನೆಯ ಕುರಿತು ನೊಡೆಲ್ ಏಜೆನ್ಸಿ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.

ಇದೇ ವೇಳೆ ಮಾತನಾಡಿದರ ಅವರು, ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಶೀಘ್ರದಲ್ಲೇ ನಡೆಯಲಿರುವ ಪರಿಶಿಷ್ಟ ಜಾತಿ, ಪಂಗಡ ,ಗಿರಿಜನ ಉಪಯೋಜನೆ ಕುರಿತ ರಾಜ್ಯ ಪರಿಷತ್ ಸಭೆಯಲ್ಲಿ ಈ ಕ್ರಿಯಾಯೋಜನೆಯನ್ನು ಮಂಡಿಸಿ, ಅನುಮೋದನೆ ಪಡೆಯಬೇಕಿದೆ’ ಎಂದು ಹೇಳಿದರು.

ADVERTISEMENT

ಶಿಕ್ಷಣ, ಸ್ವಯಂ ಉದ್ಯೋಗ, ಕೌಶಲ ಅಭಿವೃದ್ಧಿ ಹಾಗೂ ಮೂಲಭೂತಸೌಕರ್ಯಗಳ ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಪರಿಶಿಷ್ಟರಿಗೆ ಆಸ್ತಿಯಾಗಿ ರೂಪಾಂತರವಾಗುವ ಕಾರ್ಯಕ್ರಮಗಳನ್ನು ರೂಪಿಸಬೇಕು ಎಂದರು.

‘ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಆಯುಷ್ಮಾನ್ ಭಾರತ್ ಯೋಜನೆಯಡಿ ₹ 200 ಕೋಟಿ ಖರ್ಚು ಮಾಡುತ್ತಿದೆ. ಆದರೆ ಪರಿಶಿಷ್ಟ ಜಾತಿ ಮತ್ರು ವರ್ಗದ ಫಲಾನುಭವಿಗಳಿಗೆ ತಲುಪುತ್ತಿದೆಯೇ ಎನ್ನುವುದನ್ನು ಪರಿಶೀಲಿಸಿ ತಲುಪುವಂತೆ ಮಾಡಬೇಕು. ಈ ಯೋಜನೆಯಡಿ ನಿರ್ಮಿಸಲಿರುವ ಆಸ್ಪತ್ರೆ ಕಟ್ಟಡಗಳು ಪರಿಶಿಷ್ಟ ಜಾತಿ ಮತ್ತು ವರ್ಗ ಸಮುದಾಯವು ಹೆಚ್ವಿನ ಸಂಖ್ಯೆಯಲ್ಲಿರುವ ಪ್ರದೇಶದಲ್ಲಿ ನಿರ್ಮಿಸಬೇಕು. ಶುಚಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಗೊಳಿಸಬೇಕು. ಈ ಅನುದಾನವನ್ನು ಅದೇ ಸಮುದಾಯದ ಏಳಿಗೆಗೆ ಉಪಯೋಗಿಸಬೇಕು’ ಎಂದರು.

ಕಳೆದ ವರ್ಷ ಅಪೂರ್ಣಗೊಂಡ ಮನೆಗಳನ್ನು ಪೂರ್ಣಗೊಳಿಸಬೇಕು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಬೇರೆ ಊರುಗಳಿಗೆ ಉದ್ಯೋಗಕ್ಕಾಗಿ ಹೋದವರು ಹೆಚ್ಚಾಗಿ ಅವರ ಗ್ರಾಮಗಳಲ್ಲಿದ್ದಾರೆ. ಅವರೆಲ್ಲರಿಗೂ ಉದ್ಯೋಗ ಖಾತರಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಕೂಲಿ ಕಾರ್ಮಿಕರಿಗೆ ಕಡ್ಡಾಯವಾಗಿ ಉದ್ಯೋಗ ಕಾರ್ಡ್‌ಗಳನ್ನು ನೀಡಬೇಕು. ಕೃಷಿ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪಂಗಡ ಸಮುದಾಯದ ರೈತರ ಕುರಿತು ಮಾಹಿತಿ ಸಂಗ್ರಹಿಸಿ, ಸೌಲಭ್ಯಗಳನ್ನು ಸಮರ್ಪಕವಾಗಿ ವಿತರಿಸಬೇಕು ಎಂದು ಸೂಚಿಸಿದರು.

ಗಂಗಾ ಕಲ್ಯಾಣ ಯೋಜನೆಯು ಅತ್ತುತ್ತಮವಾದ ಯೋಜನೆಯಾಗಿದ್ದು, ಕೊಳವೆ ಬಾವಿಗಳಿಗೆ ಕೂಡಲೇ ವಿದ್ಯುತ್ ಸಂಪರ್ಕವನ್ನು ಕಲ್ಪಿಸುವಂತೆ ಕ್ರಮಕೈಗೊಳ್ಳಬೇಕು. ಈ ಯೋಜನೆಯಡಿ ಫಲಾನುಭವಿಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ವಸತಿ ಶಾಲೆಗಳ ಆವರಣದಲ್ಲಿ ಮಳೆ ನೀರು ಕೊಯ್ಲು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಬೇಕು. ಅಂತರ ಜಲ ಅಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕು. ವಸತಿ ಶಾಲೆ, ವಿದ್ಯಾರ್ಥಿ ನಿಲಯಗಳ ಆವರಣದಲ್ಲಿ ಸಸಿ ನೆಟ್ಟು ವನಸಿರಿಗೂ ಆದ್ಯತೆ ನೀಡಬೇಕು.‌ ಎಲ್ಲಾ ಇಲಾಖೆಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನಸಂಖ್ಯೆಯ ಮಾಹಿತಿಯನ್ನು ಸಂಗ್ರಹಿಸಬೇಕು. ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಟಾನಗೊಳಿಸಿ ಸಮುದಾಯದ ಕಲ್ಯಾಣಕ್ಕಾಗಿ ಸ್ವಯಂ ಪ್ರೇರಣೆಯಿಂದ ಅನುಷ್ಟಾನಗೊಳಿಸಿ, ಸಮುದಾಯದ ಏಳಿಗಾಗಿ ಶ್ರಮಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ ನಾಯಕ್, ಎಸ್‍ಸಿಪಿ ಮತ್ತು ಟಿಎಸ್‍ಪಿ ಯೋಜನೆಯ ಸಲಹೆಗಾರರರಾದ ಇ. ವೆಂಕಟಯ್ಯ, ಡಿಸಿಎಂ ಅವರ ಆಪ್ತಕಾರ್ಯದರ್ಶಿ ವಿ. ಶ್ರೀನಿವಾಸ, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.