ADVERTISEMENT

ವಿದ್ಯುತ್‌ ಪರಿವರ್ತಕಗಳ ಎತ್ತರಿಸಲು ಸೂಚನೆ

ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಸಭೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2021, 5:19 IST
Last Updated 4 ಜುಲೈ 2021, 5:19 IST
ಗೋವಿಂದ ಕಾರಜೋಳ
ಗೋವಿಂದ ಕಾರಜೋಳ   

ಬೆಂಗಳೂರು: ಬೆಳಗಾವಿ, ಬಾಗಲಕೋಟೆ ಸೇರಿದಂತೆ ಉತ್ತರ ಕರ್ನಾಟಕ ಭಾಗದಲ್ಲಿ ಪದೇ ಪದೇ ಪ್ರವಾಹ ಸೃಷ್ಟಿಯಾಗುವ ಪ್ರದೇಶಗಳಲ್ಲಿರುವ ವಿದ್ಯುತ್‌ ಪರಿವರ್ತಕಗಳನ್ನು ಎತ್ತರದಲ್ಲಿಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಇಂಧನ ಇಲಾಖೆಯ ಅಧಿಕಾರಿಗಳಿಗೆ ಉಪ ಮುಖ್ಯಮಂತ್ರಿ ಗೋವಿಂದ ಎಂ. ಕಾರಜೋಳ ಸೂಚಿಸಿದರು.

ಶನಿವಾರ ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ‘ಬೆಳಗಾವಿಯ ಚಿಕ್ಕೋಡಿ ತಾಲ್ಲೂಕು, ಬಾಗಲಕೋಟೆಯ ಬೀಳಗಿ, ಮುಧೋಳ, ಬಾದಾಮಿ ಸೇರಿದಂತೆ ಉತ್ತರ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಪ್ರವಾಹದಿಂದ ವಿದ್ಯುತ್‌ ಪರಿವರ್ತಕಗಳಿಗೆ ಹಾನಿಯಾಗುತ್ತಿದೆ. ಇದರಿಂದ ಪದೇ ಪದೇ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳುತ್ತಿದೆ. ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು ಯೋಜನೆ ರೂಪಿಸಬೇಕು’ ಎಂದು ನಿರ್ದೇಶನ ನೀಡಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಜಮೀನಿನಲ್ಲಿ ವಿವಿಧ ನಿಗಮಗಳು ಗಂಗಾ ಕಲ್ಯಾಣ ಯೋಜನೆ ಅಡಿಯಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ನೀಡಬೇಕು. ಸಮಾಜ ಕಲ್ಯಾಣ ಇಲಾಖೆಯಿಂದ ನೀಡುವ ₹ 50,000 ಅನುದಾನ ಸಾಕಾಗದಿದ್ದರೆ, ಪರಿಶಿಷ್ಟ ಜಾತಿ ಉಪ ಯೋಜನೆ ಮತ್ತು ಪರಿಶಿಷ್ಟ ಪಂಗಡಗಳ ಉಪ ಯೋಜನೆಯ ಅಡಿಯಲ್ಲಿ ಹೆಚ್ಚುವರಿ ಅನುದಾನ ಪಡೆಯಬೇಕು ಎಂದು ಸೂಚನೆ ನೀಡಿದರು.

ADVERTISEMENT

ಇಂಧನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಿ. ಕುಮಾರ್ ನಾಯ್ಕ್‌ ಮತ್ತು ಕೆಪಿಟಿಸಿಎಲ್‌ ವ್ಯವಸ್ಥಾಪಕ ನಿರ್ದೇಶಕಿ ಡಾ.ಎನ್‌. ಮಂಜುಳಾ ಸಭೆಯಲ್ಲಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.