ADVERTISEMENT

ವೈಟ್‌ ಟಾಪಿಂಗ್‌ ಕಾಮಗಾರಿ ಹೆಸರಿನಲ್ಲಿ ಡಿಸಿಎಂ ಫೋಟೊ ಶೂಟ್‌: ಅಶೋಕ

​ಪ್ರಜಾವಾಣಿ ವಾರ್ತೆ
Published 17 ಫೆಬ್ರುವರಿ 2025, 0:32 IST
Last Updated 17 ಫೆಬ್ರುವರಿ 2025, 0:32 IST
ಆರ್. ಅಶೋಕ 
ಆರ್. ಅಶೋಕ    

ಬೆಂಗಳೂರು: ವೈಟ್‌ ಟಾಪಿಂಗ್‌ ಕಾಮಗಾರಿ ಹೆಸರಿನಲ್ಲಿ ಫೋಟೊ ಶೂಟಿಂಗ್‌ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತದೆಯೇ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು ಉ‍ಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಪ್ರಶ್ನಿಸಿದ್ದಾರೆ.

‘ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್‌ ಬೆಂಗಳೂರಿನ ಬಗ್ಗೆ ನಿಜವಾದ ಕಾಳಜಿ ಇದ್ದರೆ ನೀವು ಮಾಡಬೇಕಾದ ಕೆಲಸಗಳು ಬಹಳಷ್ಟಿವೆ’ ಎಂದು ‘ಎಕ್ಸ್‌’ನಲ್ಲಿ ಹೇಳಿದ್ದಾರೆ.

‘₹660 ಕೋಟಿ ಖರ್ಚು ಮಾಡಿದರೂ ಬೆಂಗಳೂರು ನಗರದಲ್ಲಿ ಇನ್ನೂ ಸಾವಿರಾರು ರಸ್ತೆಗಳು ಬಾಯ್ತೆರೆದುಕೊಂಡೇ ಇವೆ. ಮಾರ್ಚ್‌ ತಿಂಗಳಿನಿಂದ ಏಪ್ರಿಲ್‌ವರೆಗೂ ಬೇಸಿಗೆ ಕಾಲದಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚುವುದಕ್ಕೆ, ರಸ್ತೆ ರಿಪೇರಿ ಮಾಡುವುದಕ್ಕೆ ಒಳ್ಳೆಯ ಸಮಯ. ಈಗಲಾದರೂ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ, ಮುಂದಿನ ಮಳೆಗಾಲದಲ್ಲಿ ರಸ್ತೆ ಗುಂಡಿಗಳು ಮತ್ತೊಮ್ಮೆ ಸಾರ್ವಜನಿಕರಿಗೆ ಮೃತ್ಯುಕೂಪಗಳಾಗುವುದು ಗ್ಯಾರಂಟಿ’ ಎಂದು ತಿಳಿಸಿದ್ದಾರೆ.

ADVERTISEMENT

‘ಕಳೆದ ವರ್ಷ ಬೇಸಿಗೆಯಲ್ಲಿ ಟ್ಯಾಂಕರ್ ಮಾಫಿಯಾ ಜತೆ ಶಾಮೀಲಾಗಿ ಜನರನ್ನು ಸುಲಿಗೆ ಮಾಡಿದ್ದಿರಿ. ಈ ವರ್ಷವಾದರೂ ಬೇಸಿಗೆ ಕಾಲದಲ್ಲಿ ಬೆಂಗಳೂರಿನ ಜನತೆ ನೀರಿಗಾಗಿ ಬವಣೆಪಡದಂತೆ ಏನಾದರೂ ಕ್ರಮ ಕೈಗೊಳ್ಳುತ್ತೀರೋ ಅಥವಾ ಜನರನ್ನು ಟ್ಯಾಂಕರ್‌ ಮಾಫಿಯಾ ಮರ್ಜಿಗೆ ಬಿಡುತ್ತೀರೋ’ ಎಂದು ಅಶೋಕ ಪ್ರಶ್ನಿಸಿದ್ದಾರೆ.

‘ಬಜೆಟ್‌ ಪೂರ್ವಭಾವಿ ಸಭೆಗಳಿಗೆ ಉಪಮುಖ್ಯಮಂತ್ರಿ ಸಾಹೇಬರ ಅನುಪಸ್ಥಿತಿ ನೋಡಿದರೆ ಬಹುಶಃ ಅವರಿಗೆ ಆಹ್ವಾನವೇ ಇಲ್ಲ ಅನ್ನಿಸುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದಲ್ಲಿ ಕೇವಲ ನಾಮಕಾವಸ್ತೆ ಉಪಮುಖ್ಯಮಂತ್ರಿ ಆಗಿರುವ ಡಿ.ಕೆ.ಶಿವಕುಮಾರ್ ಅವರನ್ನು ಆಟಕ್ಕುಂಟು ಲೆಕ್ಕಕ್ಕಿಲ್ಲ ಎನ್ನುವಂತೆ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಲಾಗಿದೆ ಅನ್ನಿಸುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.