ಬೆಂಗಳೂರು: ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚಿನ ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಸಾಧ್ಯವಾಗುವಂತೆ ಮಾರ್ಗದರ್ಶನ ನೀಡಲು ಆನ್ಲೈನ್ ಕಲಿಕಾ ವೇದಿಕೆ ‘ಅನ್ ಅಕಾಡೆಮಿ’ ಜತೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ.
ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್ ಪ್ರಭಾಕರ್ ಮತ್ತು ‘ಅನ್ ಅಕಾಡೆಮಿ’ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವಿವೇಕ್ ಸಿನ್ಹಾ ಈ ಒಪ್ಪಂದಕ್ಕೆ ಗುರುವಾರ ಸಹಿ ಹಾಕಿದರು.
‘2021ರಿಂದ 2024ರವರೆಗೆ ಈ ಒಪ್ಪಂದ ಜಾರಿಯಲ್ರಲಿ ಇಲಿದೆ. ಈ ಅವಧಿಯಲ್ಲಿ ಪ್ರತಿವರ್ಷ 1,500 ವಿದ್ಯಾರ್ಥಿಗಳಂತೆ ಒಟ್ಟು 4,500 ವಿದ್ಯಾರ್ಥಿಗಳಿಗೆ ಅನ್ ಅಕಾಡೆಮಿ ಉಚಿತ ತರಬೇತಿ ನೀಡಲಿದೆ. ಆರು ತಿಂಗಳಿಗೊಮ್ಮೆ ಆನ್ಲೈನ್ ಪರೀಕ್ಷೆಗಳನ್ನು ನಡೆಸಿ, ಆಯ್ಕೆಯಾಗುವ 750 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು. ಆ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವಿಲ್ಲದೆ ಅನ್ ಅಕಾಡೆಮಿ ಚಂದಾದಾರರನ್ನಾಗಿ ಮಾಡಲಾಗುವುದು’ ಎಂದು ಅಶ್ವತ್ಥನಾರಾಯಣ ತಿಳಿಸಿದರು.
‘ಸರ್ಕಾರಿ ಪದವಿ, ಸ್ನಾತಕೋತ್ತರ, ಎಂಜನಿಯರಿಂಗ್, ಪಾಲಿಟೆಕ್ನಿಕ್ನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು. ಕೇಂದ್ರ ಆಡಳಿತ ಸೇವೆ, ಬ್ಯಾಂಕಿಂಗ್, ಗ್ರೂಪ್ ‘ಸಿ’ ಸೇರಿದಂತೆ ವಿವಿಧ ವಲಯಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ಪ್ರತಿವರ್ಷ ಕೇಂದ್ರ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡುತ್ತಿದೆ. ಆದರೆ, ಈ ಆಯ್ಕೆಯಲ್ಲಿ ಕನ್ನಡಿಗ ವಿದ್ಯಾರ್ಥಿಗಳು ಹಿಂದೆಬೀಳುತ್ತಿದ್ದಾರೆ. ಅದನ್ನು ಸರಿಪಡಿಸುವ ಉದ್ದೇಶದಿಂದ ಅನ್ ಅಕಾಡೆಮಿ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ’ ಎಂದೂ ಅವರು ವಿವರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.