ADVERTISEMENT

ಅನಧಿಕೃತ ಧಾರ್ಮಿಕ ಕಟ್ಟಡ ವರದಿ ಸಲ್ಲಿಕೆಗೆ ಗಡುವು

​ಪ್ರಜಾವಾಣಿ ವಾರ್ತೆ
Published 1 ಡಿಸೆಂಬರ್ 2022, 20:01 IST
Last Updated 1 ಡಿಸೆಂಬರ್ 2022, 20:01 IST
   

ಬೆಂಗಳೂರು: ‘ಅನಧಿಕೃತ ಧಾರ್ಮಿಕ ಕಟ್ಟಡ ತೆರವುಗೊಳಿಸುವಲ್ಲಿ ಸಾಕಷ್ಟು ವಿಳಂಬವಾಗುತ್ತಿದ್ದು, ಇಂತಹ ಕಟ್ಟಡಗಳ ತೆರವಿಗೆ ರಾಜ್ಯ ಸರ್ಕಾರ, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪರಸ್ಪರ ಸಹಕಾರದೊಂದಿಗೆ ಜಂಟಿ ಕಾರ್ಯಾಚರಣೆ ನಡೆಸುವ ಅಗತ್ಯವಿದೆ’ ಎಂದು ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.

ಸಾರ್ವಜನಿಕ ಸ್ಥಳಗಳಲ್ಲಿನ ಅನಧಿಕೃತ ಧಾರ್ಮಿಕ ಕಟ್ಟಡಗಳನ್ನು ತೆರವುಗೊಳಿಸಲು ಸುಪ್ರೀಂಕೋರ್ಟ್ ನೀಡಿರುವ ನಿರ್ದೇಶನ ಜಾರಿಗೊಳಿಸುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿಕೊಂಡಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ಅಶೋಕ್‌ ಎಸ್‌.ಕಿಣಗಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಪ್ರತಿವಾದಿಗಳ ಪರ ವಕೀಲರು, ‘ಈ ಹಿಂದೆ ನೀಡಿರುವ ಆದೇಶದ ಅನುಪಾಲನಾ ವರದಿ ಸಲ್ಲಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ಕೋರಿದರು.

ADVERTISEMENT

ಇದನ್ನು ಮಾನ್ಯ ಮಾಡಿದ ನ್ಯಾಯಪೀಠ,‘ಹೈಕೋರ್ಟ್ ಆದೇಶ ಹೊರಡಿಸಿದ2021ರ ಆಗಸ್ಟ್ 12ರಿಂದ ವಸ್ತುಸ್ಥಿತಿ ವರದಿ ಸಲ್ಲಿಸುವ ದಿನದವರೆಗೂ ಅನಧಿಕೃತ ಧಾರ್ಮಿಕ ಕಟ್ಟಡ ಗಳ ತೆರವಿಗೆ ಏನೆಲ್ಲಾ ಕ್ರಮ ಕೈಗೊಳ್ಳಲಾಗಿದೆ ಮತ್ತು ತೆರವುಗೊಳಿರುವ ಕಟ್ಟಡಗಳ ಅಂಕಿ-ಅಂಶಗಳನ್ನು ನಿಗದಿತ ಚಾರ್ಟ್ (ವಿವರಣಾತ್ಮಕ ನಕ್ಷೆ ಒಳಗೊಂಡ ಪಟ್ಟಿ) ರೂಪದಲ್ಲಿ ಸಲ್ಲಿಸಿ‘ ಎಂದು ನಿರ್ದೇಶಿಸಿ ವಿಚಾರಣೆಯನ್ನು 2023ರ ಜನವರಿ 12ಕ್ಕೆ ಮುಂದೂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.