ಬೆಂಗಳೂರು: ‘ಲಾಕ್ಡೌನ್ ವಿಸ್ತರಣೆ ಮಾಡಬೇಕೇ ಬೇಡವೇ ಎಂಬುದರ ಬಗ್ಗೆ ಆರೋಗ್ಯ ತಜ್ಞರೊಂದಿಗೆ ಚರ್ಚಿಸಿದ ಬಳಿಕ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್–19ರ ನಿಯಂತ್ರಣ ಸಂಬಂಧ ಆರೋಗ್ಯ ತಜ್ಞರ ತಂಡದ ಜತೆಗೆ ಚರ್ಚಿಸಿ, ಅವರ ಸಲಹೆ ಪಡೆಯುತ್ತೇವೆ.ಡಾ.ಸಿ.ಎನ್. ಮಂಜುನಾಥ್ ಹಾಗೂ ಡಾ. ದೇವಿ ಶೆಟ್ಟಿ ನೇತೃತ್ವದ ಸಮಿತಿಯು ಎರಡು ದಿನಗಳಲ್ಲಿ ವರದಿ ನೀಡುವ ನಿರೀಕ್ಷೆಯಿದೆ. ಬಳಿಕ ಲಾಕ್ ಡೌನ್ ಬಗ್ಗೆ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
‘ರಾಜ್ಯದ 12 ಜಿಲ್ಲೆಗಳಲ್ಲಿ ಕೋವಿಡ್–19 ಪ್ರಕರಣಗಳು ವರದಿಯಾಗದಿರುವುದು ಸಂತೋಷದ ಸಂಗತಿ. ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾದ ನಂಜನಗೂಡು, ಗೌರಿಬಿದನೂರು ಹಾಗೂ ಭಟ್ಕಳದಲ್ಲಿ ಹೊಸದಾಗಿ ಯಾವುದೇ ಪ್ರಕರಣ ವರದಿಯಾಗಿಲ್ಲ. ಇದು ಸಮಾಧಾನಕಾರ ಸಂಗತಿ’ ಎಂದರು.
‘ರಾಜ್ಯದಲ್ಲಿ 9 ಆಸ್ಪತ್ರೆಗಳನ್ನುಕೋವಿಡ್–19 ಆಸ್ಪತ್ರೆಗಳು ಎಂದು ಗುರುತಿಸಲಾಗಿತ್ತು. ಈಗ ಆ ಪಟ್ಟಿಗೆರಾಯಚೂರು, ಬೀದರ್, ಕೊಡಗು, ಮಂಡ್ಯ, ಹಾಸನ, ಬೆಳಗಾವಿ, ಧಾರವಾಡ ಹಾಗೂ ಕೊಪ್ಪಳ ಜಿಲ್ಲಾ ಆಸ್ಪತ್ರೆಗಳನ್ನೂ ಸೇರ್ಪಡೆ ಮಾಡಲಾಗಿದೆ. ಇದರಿಂದಾಗಿ ಹಿಂದೆ ಇದ್ದ 2,490 ಹಾಸಿಗೆಗಳ ಜತೆಗೆ 1,540 ಹಾಸಿಗೆಗಳು ಹೆಚ್ಚುವರಿಯಾಗಿ ಸೇರ್ಪಡೆಯಾಗಿವೆ. ರಾಜ್ಯದಲ್ಲಿ ಸರ್ಕಾರಿ ಪ್ರಯೋಗಾಲಯಗಳ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. 3 ಖಾಸಗಿ ಪ್ರಯೋಗಾಲಯಗಳು ಕಾರ್ಯನಿರ್ವಹಿಸುತ್ತಿವೆ’ ಎಂದರು.
ಪರೀಕ್ಷಾ ಕಿಟ್ಗಳ ಕೊರತೆಯಿಲ್ಲ: ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ‘ಪ್ರತಿನಿತ್ಯ 600 ಮಂದಿಯ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಪರೀಕ್ಷೆ ಮಾಡಬಹುದಾಗಿದೆ.ಪುಣೆಯ ರಾಷ್ಟ್ರೀಯ ರೋಗಸೂಕ್ಷ್ಮಾಣು ಅಧ್ಯಯನ ಸಂಸ್ಥೆಯು (ಎನ್ಐವಿ) ಪ್ರತಿ ವಾರ ಪರೀಕ್ಷಾ ಕಿಟ್ಗಳ ಅಗತ್ಯತೆ ಬಗ್ಗೆ ಮಾಹಿತಿ ಪಡೆದು, ಪೂರೈಕೆ ಮಾಡುತ್ತಿದೆ. ಸದ್ಯಕ್ಕೆ ಪರೀಕ್ಷಾ ಕಿಟ್ಗಳ ಕೊರತೆಯಿಲ್ಲ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.