ADVERTISEMENT

ಹೊರ ರಾಜ್ಯಗಳಿಂದ ಅಕ್ರಮವಾಗಿ ಬಂದ 24 ಜನರ ವಿರುದ್ಧ ದೂರು ದಾಖಲಿಸಲು ನಿರ್ಧಾರ

​ಪ್ರಜಾವಾಣಿ ವಾರ್ತೆ
Published 22 ಮೇ 2020, 16:11 IST
Last Updated 22 ಮೇ 2020, 16:11 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ    

ಹುಬ್ಬಳ್ಳಿ: ಕೊರೊನಾ ಸೋಂಕು ಹರಡುವ ಭೀತಿಯಿದ್ದರೂ, ಮಾಹಿತಿ ನೀಡದೆ ಹೊರ ರಾಜ್ಯಗಳಿಂದ ಅಕ್ರಮವಾಗಿ ಜಿಲ್ಲೆ ಪ್ರವೇಶಿಸಿದ 24 ಜನರ ವಿರುದ್ಧ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ದೂರು ದಾಖಲಿಸಲು ಜಿಲ್ಲಾಡಳಿತ ನಿರ್ಧರಿಸಿದೆ.

ಜಿಲ್ಲಾಡಳಿತವು ‌ಮೇ 21ರಂದು ಹುಬ್ಬಳ್ಳಿ–ಧಾರವಾಡದ 24 ಜನ ಮತ್ತು ಜಿಲ್ಲೆಯ ಗ್ರಾಮೀಣ ಭಾಗದ ಒಂಬತ್ತು ಜನ ಸೇರಿದಂತೆ ‌ಒಟ್ಟು 35 ಜನರನ್ನು ತನ್ನ ವಶಕ್ಕೆ ಪಡೆದುಕೊಂಡಿತ್ತು. ಇದರಲ್ಲಿ 24 ಜನ ನಿಯಮ ಉಲ್ಲಂಘನೆ ಮಾಡಿದ್ದು ಸಾಬೀತಾಗಿದೆ. ತಾವು ಬಂದಿದ್ದ ಮಾಹಿತಿಯನ್ನು ಜಿಲ್ಲಾಡಳಿತಕ್ಕೆ ನೀಡದ ಕಾರಣ ಅವರನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದೆ.

ಮೇ 22ರಂದು ಮೂರು ಸಾವಿರಕ್ಕೂ ಹೆಚ್ಚು ಜನ ಬೇರೆ ಬೇರೆ ರಾಜ್ಯಗಳಿಂದ ಜಿಲ್ಲೆಗೆ ಮರಳಲು ಸೇವಾ ಸಿಂಧು ಮೂಲಕ ಹೆಸರು ನೋಂದಾಯಿಸಿದ್ದರು. ಅದರಲ್ಲಿ 1,855 ಜನ ರೈಲು, ಬಸ್‌ ಹಾಗೂ ಖಾಸಗಿ ವಾಹನಗಳ ಮೂಲಕ ಜಿಲ್ಲೆಗೆ ಬಂದಿದ್ದಾರೆ. ಅವರೆನ್ನೆಲ್ಲ ಪರೀಕ್ಷೆಗೆ ಒಳಪಡಿಸಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ಸಾಂಸ್ಥಿಕ ಕ್ವಾರಂಟೈನ್‌ ಮಾಡಲಾಗಿದೆ. ಇನ್ನೂ ಕೆಲವರಿಗೆ ಖಾಸಗಿ ಹೋಟೆಲ್‌ಗಳಲ್ಲಿ ಉಳಿದುಕೊಳ್ಳಲು ಅವಕಾಶ ನೀಡಲಾಗಿದೆ. ಇನ್ನುಳಿದವರು ಜಿಲ್ಲಾಡಳಿಕ್ಕೆ ಮಾಹಿತಿ ನೀಡಿಲ್ಲ. ಅವರ ಬಗ್ಗೆಯೂ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್‌ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

‘ಸೋಂಕು ಹರಡುವುದನ್ನು ತಡೆಯಲು ಜನರೇ ಸ್ವಯಂ ಪ್ರೇರಿತರಾಗಿ ಮುಂದಾಗಬೇಕು. ಹೊರರಾಜ್ಯದಿಂದ ಮರಳಿದವರು ಜಿಲ್ಲಾಡಳಿತಕ್ಕೆ ಕಡ್ಡಾಯವಾಗಿ ಮಾಹಿತಿ ನೀಡಬೇಕು. ಮಾಹಿತಿ ನೀಡದೆ ಇದ್ದರೆ ಅದು ಅಪರಾಧ. ಅವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು. ಹೊರ ರಾಜ್ಯಗಳಿಂದ ಬರುವ ಜನರ ಮೇಲೆ ಜಿಲ್ಲಾಡಳಿತ ನಿಗಾ ವಹಿಸಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.