ADVERTISEMENT

ಸೋಂಕು ಇಳಿಮುಖ ಸಕಾರಾತ್ಮಕ ಬೆಳವಣಿಗೆ: ಸಚಿವ ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 23 ಜನವರಿ 2022, 20:56 IST
Last Updated 23 ಜನವರಿ 2022, 20:56 IST
ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌
ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌    

ಬೆಂಗಳೂರು: ‘ಕೊರೊನಾ ಸೋಂಕು ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಇಳಿಮುಖ ಆಗುತ್ತಿರುವುದು ಸಕಾರಾತ್ಮಕ ಬೆಳವಣಿಗೆ. ಆದರೆ, ಬೆಂಗಳೂರು ಹೊರತುಪಡಿಸಿದರೆ ಇತರ ನಗರ ಪ್ರದೇಶ ಹಾಗೂ ಗ್ರಾಮೀಣ ಭಾಗಗಳಲ್ಲಿ ಸೋಂಕು ಹರಡುವಿಕೆ ಹೆಚ್ಚಾಗುತ್ತಿದೆ’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು.

ಸುದ್ದಿಗಾರರ ಜೊತೆ ಭಾನುವಾರ ಮಾತನಾಡಿದ ಅವರು, ‘ಮುಂದಿನ ದಿನಗಳಲ್ಲಿ ಸೋಂಕು ಕಡಿಮೆಯಾಗುವ ಸಾಧ್ಯತೆ ಇದೆ. ತಜ್ಞರು ಕೂಡ ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ’ ಎಂದರು.

‘ಬೆಂಗಳೂರಿನಲ್ಲಿ ಕೋವಿಡ್‌ ದೃಢ ಪ್ರಮಾಣ ಇದೇ 19ರಂದು ಅತಿ ಹೆಚ್ಚು ಇತ್ತು. ಈಗ ಕಡಿಮೆಯಾಗುತ್ತಿದೆ. ಈಗ ಬೇರೆ ಬೇರೆ ನಗರಗಳಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದು ಸ್ವಾಭಾವಿಕ. ಮಹಾರಾಷ್ಟ್ರ ಮತ್ತು ದೆಹಲಿಯಲ್ಲಿ ಇದೀಗ ಕಡಿಮೆಯಾಗುತ್ತಿದೆ. ನಮ್ಮಲ್ಲೂ ಕೂಡ ಎರಡು, ಮೂರು ವಾರದಲ್ಲಿ ಕಡಿಮೆಯಾಗುವ ಸಂಭವವಿದೆ’ ಎಂದರು.

ADVERTISEMENT

‘ಕೋವಿಡ್‌ ದೃಢಪಟ್ಟವರನ್ನು ಮನೆಯಿಂದ ಹೊರಗೆ ಬರಬೇಡಿ ಎಂದು ಪದೇ ಪದೇ ಮನವಿ ಮಾಡಿದರೂ ಕೆಲವರು ಅನಗತ್ಯವಾಗಿ ತಿರುಗಾಡುತ್ತಿದ್ದಾರೆ. ಇದರಿಂದ ಸೋಂಕು ಒಬ್ಬರಿಂದ ಮತ್ತೊಬ್ಬರಿಗೆ ಹರಡುತ್ತದೆ. ಅಲ್ಲದೆ, ಕರ್ನಾಟಕ ಐದಾರು ರಾಜ್ಯಗಳ ಜತೆ ಗಡಿಯನ್ನು ಹಂಚಿಕೊಂಡಿದೆ. ಒಂದು ರಾಜ್ಯದಿಂದ ಮತ್ತೊಂದು ರಾಜ್ಯಕ್ಕೆ ಸಂಚಾರ ಮಾಡುವುದರಿಂದಲೂ ಸೋಂಕು ಹಬ್ಬುತ್ತದೆ’ ಎಂದು ಸಚಿವರು ಅಭಿಪ್ರಾಯಪಟ್ಟರು.

‘ಜನ ಸಾಮಾನ್ಯರಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ವಾರಾಂತ್ಯದ ಲಾಕ್‍ಡೌನ್‍ ಹಿಂಪಡೆಯಲಾಗಿದೆ. ಕೇವಲ ಕಾನೂನಿನಿಂದ ಮಾತ್ರ ಕೋವಿಡ್‌ ಕಟ್ಟಿಹಾಕಲು ಸಾಧ್ಯವಿಲ್ಲ. ಜನರ ಸಹಕಾರವೂ ಅಷ್ಟೇ ಮುಖ್ಯ. ನಾವು ಜನರಿಗೆ ಜವಾಬ್ದಾರಿ ನೀಡಿದ್ದೇವೆ. ಸಾರ್ವಜನಿಕರು ಸರ್ಕಾರಕ್ಕೆ ಸಹಕಾರ ಕೊಡಬೇಕು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.