ADVERTISEMENT

ಯತ್ನಾಳ್‌ ವಿರುದ್ಧ ಶಿವಾನಂದ ಪಾಟೀಲ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ವಜಾ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2024, 16:29 IST
Last Updated 29 ಆಗಸ್ಟ್ 2024, 16:29 IST
ಬಸನಗೌಡ ಪಾಟೀಲ ಯತ್ನಾಳ್‌
ಬಸನಗೌಡ ಪಾಟೀಲ ಯತ್ನಾಳ್‌   

ಬೆಂಗಳೂರು: ವಿಜಯಪುರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಸಕ್ಕರೆ ಮತ್ತು ಜವಳಿ ಸಚಿವ ಶಿವಾನಂದ ಎಸ್‌.ಪಾಟೀಲ್‌ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್‌ ರದ್ದುಪಡಿಸಿದೆ.

ಪ್ರಕರಣ ರದ್ದುಪಡಿಸುವಂತೆ ಕೋರಿ ಯತ್ನಾಳ್‌ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಗುರುವಾರ ವಿಚಾರಣೆ ನಡೆಸಿದರು. 

ವಿಚಾರಣೆ ವೇಳೆ ಯತ್ನಾಳ್‌ ಪರ ವಕೀಲ ವೆಂಕಟೇಶ್ ಪಿ.ದಳವಾಯಿ, ‘ದೂರಿನಲ್ಲಿ ತಿಳಿಸಿರುವಂತೆ ನಮ್ಮ ಅರ್ಜಿದಾರರು ಸಚಿವ ಶಿವಾನಂದ ಪಾಟೀಲರ ಬಗ್ಗೆ ವೈಯಕ್ತಿಕ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ, ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾದ್ದವರು ಸಂಯುಕ್ತಾ ಪಾಟೀಲ. ಹೀಗಾಗಿ, ಭಾರತೀಯ ದಂಡ ಸಂಹಿತೆ–1860ರ ಕಲಂ 171 ಜಿ ಮತ್ತು ಜನಪ್ರತಿನಿಧಿ ಕಾಯ್ದೆ–1950ರ ಕಲಂ 123 (4) ಅನ್ನು ಯತ್ನಾಳ್‌ ಅವರಿಗೆ ಅನ್ವಯಿಸಿ ಪ್ರಕರಣ ನಡೆಸುವುದು ಕಾನೂನಿನ ದುರ್ಬಳಕೆ ಆಗುತ್ತದೆ. ಆದ್ದರಿಂದ, ಅರ್ಜಿದಾರರ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದುಪಡಿಸಬೇಕು’ ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣಾ ನ್ಯಾಯಾಲಯದಲ್ಲಿನ ಮೊಕದ್ದಮೆಯನ್ನು ರದ್ದುಗೊಳಿಸಿ ಆದೇಶಿಸಿತು.

ADVERTISEMENT

ಪ್ರಕರಣವೇನು?: ‘ಇತ್ತೀಚಿನ ಲೋಕಸಭೆ ಚುನಾವಣಾ ರ್‍ಯಾಲಿ ಸಂದರ್ಭದಲ್ಲಿ ಯತ್ನಾಳ್‌ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿ ಶಿವಾನಂದ ಪಾಟೀಲ್‌ ಅವರು, ಯತ್ನಾಳ್‌ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದನ್ನು ವಿಚಾರಣೆಗೆ ಪರಿಗಣಿಸಿದ್ದ ವಿಚಾರಣಾ ನ್ಯಾಯಾಲಯ ಯತ್ನಾಳ್‌ ಅವರಿಗೆ ಷೋಕಾಸ್‌ ನೋಟಿಸ್‌ ಜಾರಿಗೊಳಿಸುವಂತೆ 2024ರ ಜುಲೈ 16ರಂದು ಆದೇಶಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.