ಬೆಳಗಾವಿ: ಆಲಮಟ್ಟಿ ಜಲಾಶಯದ ಎತ್ತರ ಹೆಚ್ಚಿಸಲು ರಾಜ್ಯ ಸರ್ಕಾರ ವಿಳಂಬ ಮಾಡುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪ ಅವರು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.
ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಅವಧಿಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ’ಕೆಆರ್ಎಸ್ ಜಲಾಶ
ಯವನ್ನು ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರ ಅತ್ಯುತ್ಸಾಹ ತೋರುತ್ತಿದೆ. ಇದಕ್ಕಾಗಿ
₹1,500 ಕೋಟಿ ವೆಚ್ಚ ಮಾಡಲಾಗುತ್ತಿದೆ. ಕೃಷ್ಣಾ ನ್ಯಾಯಾಧೀಕರಣದ ತಡೆಯಾಜ್ಞೆ 2012ರಲ್ಲಿ ತೆರವುಗೊಂಡಿದೆ. ಆದರೆ, ಆ ಬಳಿಕ ಒಂದೇ ಒಂದು ಹೆಜ್ಜೆ ಮುಂದಿಟ್ಟಿಲ್ಲ. ತಾರತಮ್ಯ ಏಕೆ‘ ಎಂದು ಪ್ರಶ್ನಿಸಿದರು. ಕೆಆರ್ಎಸ್ ಅಭಿವೃದ್ಧಿಗೆ ರಾಜ್ಯ ಸರ್ಕಾರ ನಯಾಪೈಸೆ ಖರ್ಚು ಮಾಡುತ್ತಿಲ್ಲ ಎಂದು ಶಿವಕುಮಾರ್ ಸಮಜಾಯಿಷಿ ನೀಡಿದರು.
ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಚರ್ಚೆಗೆ ಅವಕಾಶ ಕೊಡಬೇಕು ಎಂದು ಹಲವು ಸದಸ್ಯರು ಮನವಿ ಮಾಡಿದರು. ನೀರಾವರಿ ಯೋಜನೆಗಳ ಬಗ್ಗೆ ಒಂದು ಗಂಟೆ ಚರ್ಚೆಗೆ ಅವಕಾಶ ನೀಡುವುದಾಗಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ ಕುಮಾರ್ ಪ್ರಕಟಿಸಿದರು.
ಬೆಣ್ಣೆಹಳ್ಳ: ನೀರು ಬಳಕೆಗೆ ಡಿಪಿಆರ್
ಬೆಣ್ಣೆಹಳ್ಳ ಹಾಗೂ ತುಪ್ಪರಿಹಳ್ಳದಲ್ಲಿ ಹೆಚ್ಚುವರಿಯಾಗಿ 2.20 ಟಿಎಂಸಿ ಅಡಿ ನೀರನ್ನು ಹೆಚ್ಚುವರಿಯಾಗಿ ಬಳಸಿಕೊಳ್ಳಲು ವಿಸ್ತೃತ ಯೋಜನಾ ವರದಿಸಿದ್ಧಪಡಿಸಲಾಗುತ್ತಿದೆ ಎಂದು ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದರು.
ಶೂನ್ಯ ವೇಳೆಯಲ್ಲಿ ಬಿಜೆಪಿಯ ಶಂಕರ ಬಿ.ಪಾಟೀಲ ಮುನೇನಕೊಪ್ಪ ಅವರ ಪ್ರಶ್ನೆಗೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.