
ನವದೆಹಲಿ: ಬೇಡ್ತಿ–ಅಘನಾಶಿನಿ ನದಿ ಜೋಡಣೆ ಹಾಗೂ ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯನ್ನು ಕೈ ಬಿಡಬೇಕು ಎಂದು ಒತ್ತಾಯಿಸಿ ಉತ್ತರ ಕನ್ನಡದ ಜನಪ್ರತಿನಿಧಿಗಳ ಹಾಗೂ ಪರಿಸರ ವಾದಿಗಳ ನಿಯೋಗವು ಕೇಂದ್ರ ಸಚಿವರಿಗೆ ಸೋಮವಾರ ಮನವಿ ಸಲ್ಲಿಸಿತು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದ ನಿಯೋಗವು ಜಲಶಕ್ತಿ ಸಚಿವ ಸಿ.ಆರ್.ಪಾಟೀಲ, ಅರಣ್ಯ ಸಚಿವ ಭೂಪೇಂದರ್ ಯಾದವ್, ಆಹಾರ ಸಚಿವ ಪ್ರಲ್ಹಾದ ಜೋಶಿ ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಮಾಡಿತು.
ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾಗೇರಿ, ‘ನದಿ ತಿರುವು ಯೋಜನೆಗಳಿಂದ ಜಿಲ್ಲೆಯ ಜೀವವೈವಿಧ್ಯ ಮತ್ತು ಸ್ಥಳೀಯರ ಜೀವನೋಪಾಯಕ್ಕೆ ತೊಂದರೆ ಉಂಟಾಗಲಿದೆ. ಹೀಗಾಗಿ, ಈ ಯೋಜನೆಗೆ ಅನುಮತಿ ನೀಡಬಾರದು ಎಂದು ಒತ್ತಾಯಿಸಿದ್ದೇವೆ‘ ಎಂದರು.
‘ಜಿಲ್ಲೆಯಲ್ಲಿ ಈಗಿರುವ ಯೋಜನೆಗಳೇ ನಮ್ಮ ಜಿಲ್ಲೆಗೆ ಭಾರವಾಗಿವೆ. ನದಿ ಜೋಡಣೆ ಯೋಜನೆಗೆ ಜಿಲ್ಲೆಯಲ್ಲಿ ತೀವ್ರ ವಿರೋಧ ಇದೆ, ನಮ್ಮ ವಿರೋಧವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಿದ್ದೇವೆ. ಯೋಜನೆಯ ವಿಸ್ತೃತ ಯೋಜನಾ ವರದಿ ತಯಾರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಇದನ್ನು ಕೂಡಲೇ ಕೈ ಬಿಡಬೇಕು. ಜಿಲ್ಲೆಯ ಧಾರಣಾ ಶಕ್ತಿಯ ಅಧ್ಯಯನ ನಡೆಯಬೇಕು‘ ಎಂದು ಅವರು ಆಗ್ರಹಿಸಿದರು.
ಕೇಂದ್ರ ಸರ್ಕಾರದ ಅಧಿಕಾರಿಗಳ ಜೊತೆಯೂ ಸಭೆ ನಡೆಯಿತು. ಸಚಿವರು ಹಾಗೂ ಅಧಿಕಾರಿಗಳಿಂದ ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ ಎಂದು ಅವರು ಹೇಳಿದರು.
ನಿಯೋಗದಲ್ಲಿ ಮೀನುಗಾರಿಕೆ ಸಚಿವ ಮಾಂಕಾಳ ವೈದ್ಯ, ಕಾಂಗ್ರೆಸ್ ಶಾಸಕ ಭೀಮಣ್ಣ ನಾಯ್ಕ್, ಶಾಸಕರಾದ ಶಿವರಾಮ ಹೆಬ್ಬಾರ, ಶಾಂತಾರಾಮ ಸಿದ್ಧಿ, ಪರಿಸರವಾದಿ ಅನಂತ ಹೆಗಡೆ ಅಶೀಸರ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.