ನವದೆಹಲಿ:ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ನ್ಯಾಯಾಂಗ ಬಂಧನದ ಅವಧಿಯನ್ನು ದೆಹಲಿಯ ವಿಶೇಷ ನ್ಯಾಯಾಲಯ ಅಕ್ಟೋಬರ್ 25ರವರೆಗೆ ವಿಸ್ತರಿಸಿದೆ.
ನ್ಯಾಯಾಂಗ ಬಂಧನ ಅವಧಿ ಮುಕ್ತಾಯವಾದ ಕಾರಣ ಅವರನ್ನು ನ್ಯಾಯಾಲಯಕ್ಕೆ ಮಂಗಳವಾರ ಹಾಜರುಪಡಿಸಲಾಯಿತು. ಶಿವಕುಮಾರ್ ಅವರ ಜಾಮೀನು ಅರ್ಜಿ ದೆಹಲಿ ಹೈಕೋರ್ಟ್ನಲ್ಲಿ ವಿಚಾರಣೆಗೆ ಬಾಕಿ ಇರುವ ಬಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಪರ ವಕೀಲ ಅಮಿತ್ ಮಹಾಜನ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದರು.
‘ಜೈಲು ಅಧಿಕಾರಿಗಳಿಂದ ತಾರತಮ್ಯ’:ಜೈಲು ಅಧಿಕಾರಿಗಳು ತಾರತಮ್ಯ ಎಸಗುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ‘ಪ್ರತಿಯೊಬ್ಬರಿಗೂ ಕುರ್ಚಿ ನೀಡಿದ್ದರೂ ನನಗೆ ಮಾತ್ರ ನೀಡಿಲ್ಲ. ತೀವ್ರವಾದ ಬೆನ್ನು ನೋವಿನಿಂದ ಬಳಲುತ್ತಿದ್ದೇನೆ’ ಎಂದು ಅವರು ನ್ಯಾಯಾಲಯಕ್ಕೆ ತಿಳಿಸಿದರು. ಈ ವೇಳೆ, ಜೈಲಿನಲ್ಲಿ ಅವರಿಗೆ ಕುರ್ಚಿ ಒದಗಿಸುವಂತೆ ನ್ಯಾಯಾಲಯ ಸೂಚಿಸಿತು. ಶಿವಕುಮಾರ್ ಅವರನ್ನು ಭೇಟಿಯಾಗಲು ಅವರ ಕುಟುಂಬದವರಿಗೆ ನ್ಯಾಯಾಲಯ ಅವಕಾಶ ಕಲ್ಪಿಸಿತು.
ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಸೆಪ್ಟೆಂಬರ್ 3ರಂದುಶಿವಕುಮಾರ್ ಅವರನ್ನು ಬಂಧಿಸಲಾಗಿತ್ತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.