ADVERTISEMENT

ಪರಿಶಿಷ್ಟ ಸಮುದಾಯವರಿಗೆ ಸಿ.ಎಂ ಸ್ಥಾನಕ್ಕೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 24 ಜುಲೈ 2021, 19:34 IST
Last Updated 24 ಜುಲೈ 2021, 19:34 IST

ಬೆಂಗಳೂರು: ‘ಮುಖ್ಯಮಂತ್ರಿ ಸ್ಥಾನದಿಂದ ಬಿ.ಎಸ್. ಯಡಿಯೂರಪ್ಪ ಅವರು ಕೆಳಗಿಳಿದರೆ ಬಿಜೆಪಿ ವರಿಷ್ಠರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದ ಹಿರಿಯ ನಾಯಕರೊಬ್ಬರನ್ನು ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡಬೇಕು’ ಎಂದು ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘ ಹಾಗೂ ಸಾಮಾಜಿಕ ನ್ಯಾಯ ಪರಿಷತ್ ಜಂಟಿಯಾಗಿ ಆಗ್ರಹಿಸಿವೆ.

ಇಲ್ಲಿ ಶನಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಷತ್ತಿನ ಅಧ್ಯಕ್ಷ ಅನಂತರಾಯಪ್ಪ, ‘ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ 17ರಷ್ಟಿರುವ ಲಿಂಗಾಯತ ಸಮುದಾಯದವರು ಈವರೆಗೆ 9 ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಶೇ 16 ರಷ್ಟಿರುವ ಒಕ್ಕಲಿಗ ಸಮುದಾಯದವರು 6 ಸಲ, ಶೇ 5 ರಷ್ಟಿರುವ ಬ್ರಾಹ್ಮಣ ಸಮುದಾಯದವರು 2 ಬಾರಿ ಹಾಗೂ ಹಿಂದುಳಿದ ವರ್ಗದವರು 5 ಸಾರಿ ಮುಖ್ಯಮಂತ್ರಿಯಾಗಿದ್ದಾರೆ. ಆದರೆ, ಶೇ 24 ರಷ್ಟಿರುವ ಎಸ್‌.ಸಿ ಮತ್ತು ಎಸ್‌.ಟಿ ಸಮುದಾಯದವರಿಗೆ ಒಮ್ಮೆಯೂ ಮುಖ್ಯಮಂತ್ರಿಯಾಗುವ ಅವಕಾಶ ಸಿಕ್ಕಿಲ್ಲ’ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಅಧ್ಯಕ್ಷ ಜಂಬು ದ್ವೀಪ ಸಿದ್ದರಾಜು, ‘ಎಸ್‌.ಸಿ, ಎಸ್‌.ಟಿ ಸಮುದಾಯದ ಬೆಂಬಲದಿಂದ 50 ವರ್ಷ ಅಧಿಕಾರ ಅನುಭವಿಸಿದ ಕಾಂಗ್ರೆಸ್, ಈ ವರ್ಗಕ್ಕೆ ಒಮ್ಮೆಯೂ ಮುಖ್ಯಮಂತ್ರಿ ಸ್ಥಾನ ನೀಡದೆ ವಂಚಿಸಿತು. ಬಿಜೆಪಿಯಲ್ಲಿ ಗೋವಿಂದ ಕಾರಜೋಳ, ಬಿ. ಶ್ರೀರಾಮುಲು ಹಾಗೂ ಅರವಿಂದ ಲಿಂಬಾವಳಿ ಈ ಸಮುದಾಯದವರು. ಮುಖ್ಯಮಂತ್ರಿ ಸ್ಥಾನಕ್ಕೆ ಅರ್ಹತೆ ಹೊಂದಿದ್ದಾರೆ. ಈ ಮೂವರು ಹಿರಿಯ ನಾಯಕರು
ಪಕ್ಷಕ್ಕೆ ಅತ್ಯುತ್ತಮ ಸೇವೆ ಸಲ್ಲಿಸಿದ್ದಾರೆ. 2023 ಮತ್ತು 2024ರಲ್ಲಿ ನಡೆಯಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ವರಿಷ್ಠರು ಈ ಸಮುದಾಯಕ್ಕೆ ಮುಖ್ಯಮಂತ್ರಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.