ADVERTISEMENT

ಡಿಫೆನ್ಸ್ ಕಾರಿಡಾರ್‌ ಮಂಜೂರಾತಿಗೆ ಪಟ್ಟು: ಎಂ.ಬಿ. ಪಾಟೀಲ

​ಪ್ರಜಾವಾಣಿ ವಾರ್ತೆ
Published 26 ಮೇ 2025, 15:25 IST
Last Updated 26 ಮೇ 2025, 15:25 IST
<div class="paragraphs"><p>ಎಂ.ಬಿ. ಪಾಟೀಲ</p></div>

ಎಂ.ಬಿ. ಪಾಟೀಲ

   

–‍ ಪ್ರಜಾವಾಣಿ ಚಿತ್ರ

ಬೆಂಗಳೂರು: ‘ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸದ್ಯದಲ್ಲಿ ಭೇಟಿ ಮಾಡಿ ರಾಜ್ಯಕ್ಕೆ ಸಿಗಬೇಕಾಗಿರುವ ರಕ್ಷಣಾ ಕೈಗಾರಿಕಾ ಕಾರಿಡಾರ್ (ಡಿಫೆನ್ಸ್ ಕಾರಿಡಾರ್) ಮಂಜೂರು ಮಾಡುವಂತೆ ಒತ್ತಾಯಿಸುತ್ತೇನೆ’ ಎಂದು ಕೈಗಾರಿಕಾ ಸಚಿವ ಎಂ‌.ಬಿ. ಪಾಟೀಲ ತಿಳಿಸಿದರು.

ADVERTISEMENT

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಕೇಂದ್ರ ಸರ್ಕಾರವು ಎರಡು ವರ್ಷಗಳ ಹಿಂದೆ ಉತ್ತರಪ್ರದೇಶ ಮತ್ತು ತಮಿಳು‌ನಾಡಿಗೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡಿದೆ. ಅದಕ್ಕೆ ನಮ್ಮ ಅಭ್ಯಂತರ ಇಲ್ಲ. ಆದರೆ, ರಕ್ಷಣಾ ವಹಿವಾಟಿನಲ್ಲಿ ದೇಶಕ್ಕೆ ಶೇಕಡಾ 65ರಷ್ಟು ಕೊಡುಗೆ ನೀಡುತ್ತಿರುವ ಮತ್ತು ಜಾಗತಿಕವಾಗಿ ತೃತೀಯ ಸ್ಥಾನದಲ್ಲಿರುವ ಕರ್ನಾಟಕಕ್ಕೆ ಆ ಯೋಜ‌ನೆಯನ್ನು ಘೋಷಿಸದಿರುವುದು ಸರಿಯಲ್ಲ’ ಎಂದರು.

‘ಇತ್ತೀಚೆಗೆ ನಡೆದ ನೀತಿ ಆಯೋಗದ ಸಭೆಯಲ್ಲಿ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಬೆಂಗಳೂರಿನಲ್ಲಿರುವ ಎಚ್ಎಎಲ್ ಕಾರ್ಖಾನೆಯನ್ನು ತಮ್ಮ ರಾಜ್ಯಕ್ಕೆ ಸ್ಥಳಾಂತರಿಸುವಂತೆ ಕೋರಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ನಾಯ್ಡು ಅವರು ಈ ವ್ಯವಸ್ಥೆಯನ್ನು ಚೆನ್ನಾಗಿ ಬಲ್ಲವರು. ಅವರು ತಮ್ಮಲ್ಲೂ ಎಚ್ಎಎಲ್ ಘಟಕ ಸ್ಥಾಪನೆಗೆ ಕೇಳಿರಬಹುದು. ಅದರಲ್ಲಿ ತಪ್ಪೇನೂ ಇಲ್ಲ. ಒಂದು ವೇಳೆ ಎಚ್ಎಎಲ್ ಸ್ಥಳಾಂತರಕ್ಕೆ ಕೇಳಿದ್ದರೆ ಅದು ಸರಿಯಲ್ಲ’ ಎಂದು ಸಚಿವರು ಅಭಿಪ್ರಾಯಪಟ್ಟರು.

‘ಚಂದ್ರಬಾಬು ನಾಯ್ಡು ತಮ್ಮಲ್ಲಿ ಉದ್ದಿಮೆ ಬೆಳೆಸಲು ಲೇಪಾಕ್ಷಿಯಲ್ಲಾದರೂ ಜಮೀನು ಕೊಡಲಿ, ಮಡಕಶಿರಾದಲ್ಲಾದರೂ ಭೂಮಿ ಕೊಡಲಿ. ಅದು ಅವರಿಗೆ ಬಿಟ್ಟಿದ್ದು. ಆದರೆ, ನಮ್ಮಲ್ಲಿರುವ ಉದ್ಯಮಗಳನ್ನು ಎಳೆದುಕೊಂಡು ಹೋಗುವ ಆಲೋಚನೆಯನ್ನು ಅವರು ಮಾಡಿರಲಾರರು ಎಂದು ಭಾವಿಸಿದ್ದೇನೆ. ರಾಜನಾಥ್ ಸಿಂಗ್ ಬಳಿಗೆ ಹೋಗುವಾಗ ಕೇಂದ್ರ ಸಂಪುಟದಲ್ಲಿರುವ ನಮ್ಮ ರಾಜ್ಯದ ಸಚಿವರುಗಳನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು. ಅದಕ್ಕೂ ಮೊದಲು, ನೀತಿ ಆಯೋಗದ ಸಭೆಯಲ್ಲಿ ನಡೆದಿದೆ ಎನ್ನಲಾಗುತ್ತಿರುವ ವಿದ್ಯಮಾನದ ಬಗ್ಗೆ ಮುಖ್ಯಮಂತ್ರಿ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿಯ ಜತೆ ಚರ್ಚಿಸಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.