ADVERTISEMENT

ಬೇಡಿಕೆ ಈಡೇರಿಸಲು ಆಗ್ರಹ: ಸಂಸದ, ಶಾಸಕರ ಮನೆಗೆ ಮುತ್ತಿಗೆ

ಆರ್ಯ ಈಡಿಗ ಸಮಾಜದ ಬೇಡಿಕೆ ಈಡೇರಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 13 ಜುಲೈ 2022, 18:18 IST
Last Updated 13 ಜುಲೈ 2022, 18:18 IST
ಕಲಬುರಗಿಯಲ್ಲಿ ಬುಧವಾರ ಸಂಸದ ಡಾ. ಉಮೇಶ ಜಾಧವ ಅವರ ನಿವಾಸದ ಎದುರು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು
ಕಲಬುರಗಿಯಲ್ಲಿ ಬುಧವಾರ ಸಂಸದ ಡಾ. ಉಮೇಶ ಜಾಧವ ಅವರ ನಿವಾಸದ ಎದುರು ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು   

ಕಲಬುರಗಿ: ಆರ್ಯ ಈಡಿಗ ಸಮುದಾಯದ ವಿವಿಧ ಬೇಡಿಕೆಗಳನ್ನು ಸರ್ಕಾರಕ್ಕೆ ಮನಗಾಣಿಸಿ, ಈಡೇರಿಸುವಲ್ಲಿ ಜಿಲ್ಲೆಯ ಬಿಜೆಪಿಯ ಸಂಸದರು ಮತ್ತು ಶಾಸಕರು ವಿಫಲವಾಗಿದ್ದಾರೆ ಎಂದು ಆರೋಪಿಸಿ ಅವರ ಮನೆಗಳಿಗೆ, ಆರ್ಯ ಈಡಿಗ ರಾಷ್ಟ್ರೀಯ ಮಹಾಮಂಡಳಿ ಅಧ್ಯಕ್ಷ ಪ್ರಣವಾನಂದ ಸ್ವಾಮೀಜಿ ನೇತೃತ್ವದಲ್ಲಿ ಸಮುದಾಯದವರುಬುಧವಾರ ಮುತ್ತಿಗೆ ಹಾಕಿದರು.

ಸಂಸದ ಡಾ. ಉಮೇಶ ಜಾಧವ, ಶಾಸಕರಾದ ದತ್ತಾತ್ರೇಯ ಪಾಟೀಲ ರೇವೂರ, ಬಸವರಾಜ ಮತ್ತಿಮೂಡ, ರಾಜಕುಮಾರ ಪಾಟೀಲ ತೇಲ್ಕೂರ ಸೇರಿ ಮತ್ತಿತರರ ಮನೆ ಎದುರು ಅವರು ಪ್ರತಿಭಟನೆ ನಡೆಸಿದರು. ಬೇಡಿಕೆಗಳನ್ನು ಈಡೇರಿಸಬೇಕೆಂದು ಪಟ್ಟು
ಹಿಡಿದರು. ಜಿಲ್ಲಾ ಉಸ್ತುವಾರಿ ಸಚಿವ ಮುರಗೇಶ ನಿರಾಣಿ ಅಧ್ಯಕ್ಷತೆಯಲ್ಲಿ ಸಭೆಯಿದ್ದ ಕಾರಣ, ಸಂಸದ ಹಾಗೂ ಶಾಸಕರು ಪ್ರತಿಭಟನಕಾರರನ್ನು ಭೇಟಿ ಆಗಲಿಲ್ಲ.

‘ಸೇಂದಿ ಮಾರಾಟಕ್ಕೆ ಅನುಮತಿ ಸೇರಿ ಇತರ ಬೇಡಿಕೆಗಳನ್ನು ಈಡೇರಿಸುವ ಕುರಿತು ಸಂಸದರು ಮುಖ್ಯಮಂತ್ರಿಯವರ ಜೊತೆ ಚರ್ಚಿಸುವುದಾಗಿ ಸಂಸದರು ಭರವಸೆ ನೀಡಿದ್ದಾರೆ. ಸರ್ಕಾರದ ಮೇಲೆ ಇನ್ನಷ್ಟು ಒತ್ತಡ ಹೇರಲು ಜುಲೈ 27ರಂದು ಬೀದರ್ ಜಿಲ್ಲೆಯ ಬಸವಕಲ್ಯಾಣದ ಬೆಟ್ಟದ ಬಾಲಕುಂದ ಗ್ರಾಮದಿಂದ ಕಲಬುರಗಿವರೆಗೆ ಪಾದಯಾತ್ರೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಎದುರು ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತೇವೆ’ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.