ಬೆಂಗಳೂರು: ರಾಜ್ಯದಲ್ಲಿರುವ ಮರಾಠಾ ಸಮುದಾಯದ ಜನರನ್ನು ಹಿಂದುಳಿದ ವರ್ಗಗಳ ಪ್ರವರ್ಗ ‘2ಎ’ ಪಟ್ಟಿಗೆ ಸೇರಿಸಿ ಆದೇಶ ಹೊರಡಿಸುವಂತೆ ಕಾಂಗ್ರೆಸ್ನ ಶ್ರೀಕಾಂತ ಘೋಟ್ನೇಕರ ವಿಧಾನ ಪರಿಷತ್ನಲ್ಲಿ ಮಂಗಳವಾರ ಆಗ್ರಹಿಸಿದರು.
ಶೂನ್ಯವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಅವರು, ‘ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಮರಾಠಾ ಸಮುದಾಯವನ್ನು 2ಎ ಪಟ್ಟಿಗೆ ಸೇರಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರು. ಈವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಏಳು ವರ್ಷಗಳಿಂದ ನಾನು ಸದನದಲ್ಲಿ ಈ ಬಗ್ಗೆ ಪ್ರಸ್ತಾಪಿಸುತ್ತಲೇ ಇದ್ದೇನೆ’ ಎಂದರು.
ಮರಾಠಾ ಸಮುದಾಯದವರು ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಅವರನ್ನು ಮಹಾರಾಷ್ಟ್ರ ಸರ್ಕಾರ 2ಎ ಪಟ್ಟಿಗೆ ಸೇರಿಸಿದೆ. ಅದೇ ರೀತಿ ರಾಜ್ಯದಲ್ಲೂ ತೀರ್ಮಾನ ಕೈಗೊಳ್ಳಬೇಕು ಎಂದ ಘೋಟ್ನೇಕರ, ಯಡಿಯೂರಪ್ಪ ಅವರ ಭಾಷಣದ ರೆಕಾರ್ಡಿಂಗ್ ಇದ್ದ ಸಿ.ಡಿ ಪ್ರದರ್ಶಿಸಿದರು. ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಧರಣಿಗೂ ಮುಂದಾದರು.
ಮುಖ್ಯಮಂತ್ರಿಯವರಿಂದ ಉತ್ತರ ಕೊಡಿಸುವುದಾಗಿ ಸಭಾ ನಾಯಕ ಕೋಟ ಶ್ರೀನಿವಾಸ ಪೂಜಾರಿ ಭರವಸೆ ನೀಡಿದರು. ಧರಣಿ ಮಾಡದಂತೆ ಇತರ ಸದಸ್ಯರು ಘೋಟ್ನೇಕರ ಅವರ ಮನವೊಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.