ADVERTISEMENT

ಎನ್‌ಡಿಆರ್‌ಎಫ್‌ ಪರಿಹಾರ ಹೆಚ್ಚಳಕ್ಕೆ ಮನವಿ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2022, 21:15 IST
Last Updated 1 ಆಗಸ್ಟ್ 2022, 21:15 IST
ಆರ್. ಅಶೋಕ
ಆರ್. ಅಶೋಕ   

ಬೆಂಗಳೂರು: ಅತಿವೃಷ್ಟಿ, ಪ್ರವಾಹ ಸೇರಿ ದಂತೆ ನೈಸರ್ಗಿಕ ವಿಕೋಪಗಳಿಂದ ಸಂಭ ವಿಸುವ ಹಾನಿಗೆ ರಾಷ್ಟ್ರೀಯ ವಿಪತ್ತು ಪರಿ ಹಾರ ನಿಧಿ (ಎನ್‌ಡಿಆರ್‌ಎಫ್) ಮೂಲಕ ನೀಡುವ ಪರಿಹಾರದ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ‘ವಿಕೋಪಗಳ ಸಂದರ್ಭದಲ್ಲಿ ಎನ್‌ಡಿಆರ್‌ಎಫ್‌ ಮೂಲಕ ನೀಡುವ ಪರಿಹಾರ ಅತ್ಯಲ್ಪ ಪ್ರಮಾಣದಲ್ಲಿದೆ. ಅದನ್ನು ಹೆಚ್ಚಿಸುವಂತೆ ಮನವಿ ಮಾಡಲು ದೆಹಲಿಗೆ ತೆರಳಿ, ಕೇಂದ್ರ ಗೃಹ, ಹಣಕಾಸು ಮತ್ತು ಕೃಷಿ ಸಚಿವರನ್ನು ಭೇಟಿಮಾಡಲಾಗುವುದು’ ಎಂದರು.

ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ, ಬೆಳೆ ಹಾನಿ ಪ್ರಕರಣಗಳಲ್ಲಿ ಮಳೆ ಯಾಶ್ರಿತ ಜಮೀನುಗಳಿಗೆ ಪ್ರತಿ ಹೆಕ್ಟೇರ್‌ಗೆ ₹ 6,800, ನೀರಾವರಿ ಜಮೀನಿಗೆ ಪ್ರತಿ ಹೆಕ್ಟೇರ್‌ಗೆ ₹ 13,500 ಮತ್ತು ಬಹುವಾರ್ಷಿಕ ಬೆಳೆಗಳಿಗೆ ಹೆಕ್ಟೇರ್‌ಗೆ ₹ 18,000 ಪರಿಹಾರ ನೀಡಲಾಗುತ್ತಿದೆ. ಅದಕ್ಕೆ ರಾಜ್ಯ ಸರ್ಕಾರ ಅನುಕ್ರಮವಾಗಿ ₹ 6,800, ₹ 11,500 ಮತ್ತು ₹ 10,000 ಸೇರಿಸಿ ವಿತರಿಸುತ್ತಿದೆ. ಪ್ರಾಣಹಾನಿಗೆ ₹ 4 ಲಕ್ಷ ಹಾಗೂ ಮನೆ ಕುಸಿತಕ್ಕೆ ₹ 95,100 ಮಾತ್ರ ಪರಿಹಾರ ಇದೆ ಎಂದು ಹೇಳಿದರು.

ADVERTISEMENT

ಪ್ರಾಣ ಹಾನಿ ಪ್ರಕರಣಗಳಲ್ಲಿ ₹1 ಲಕ್ಷ ಹಾಗೂ ಮನೆ ಕುಸಿತ ಪ್ರಕರಣಗಳಲ್ಲಿ ₹ 4.04 ಲಕ್ಷವನ್ನು ರಾಜ್ಯ ಸರ್ಕಾರ ಹೆಚ್ಚುವರಿಯಾಗಿ ನೀಡುತ್ತಿದೆ. ಎನ್‌ ಡಿಆರ್‌ಎಫ್‌ ಪರಿಹಾರದ ಮೊತ್ತವನ್ನು ಮೂರು ಪಟ್ಟು ಹೆಚ್ಚಿಸಿದರೆ ಸರ್ಕಾರಕ್ಕೆ ಅನುಕೂಲವಾಗುತ್ತದೆ ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ಸುರಿದ ಮಳೆ ಯಿಂದ 101 ಗ್ರಾಾಮಗಳ 11,602 ಜನ ರಿಗೆ ತೊಂದರೆಯಾಗಿದೆ. 479 ಮನೆಗಳು ಸಂಪೂರ್ಣವಾಗಿ ಕುಸಿದುಬಿದ್ದಿದ್ದು, 1,982 ಮನೆಗಳು ಭಾಗಶಃ ಹಾನಿಗೊಂಡಿವೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.