ಹುಬ್ಬಳ್ಳಿ: ಫೆಬ್ರವರಿ ತಿಂಗಳೊಳಗೆ ಕಳಸಾ ಬಂಡೂರಿ ಯೋಜನೆ ಕಾಮಗಾರಿ ಆರಂಭಿಸಬೇಕು. ಇಲ್ಲದಿದ್ದರೆ ಮತ್ತೆ ನಿರಂತರ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಕರ್ನಾಟಕ ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದು ತೇಜಿ ಎಚ್ಚರಿಸಿದರು.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳಸಾ ಬಂಡೂರಿ ಯೋಜನೆ ಕಾಮಗಾರಿ ಕುರಿತು ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿ ಒಂದು ವರ್ಷ ಕಳೆದರೂ ಕಾಮಗಾರಿ ಪ್ರಾರಂಭವಾಗಿಲ್ಲ. ಉತ್ತರ ಕರ್ನಾಟಕದ ಪ್ರತಿಯೊಂದು ಯೋಜನೆಗೂ ಮಲತಾಯಿ ಧೋರಣೆ ಅನುಸರಿಸಲಾಗುತ್ತಿದೆ. ಮೈಸೂರು, ಬೆಂಗಳೂರು ಭಾಗವನ್ನು ಮಾತ್ರ ಅಭಿವೃದ್ಧಿ ಮಾಡಲಾಗುತ್ತಿದೆ. ಸ್ಥಳೀಯ ಜನಪ್ರತಿನಿಧಿಗಳು ಸಹ ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇದು ಹೀಗೆ ಮುಂದುವರೆದರೆ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಕುರಿತು ಧ್ವನಿ ಎತ್ತಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಳಸಾ ಬಂಡೂರಿ ಯೋಜನೆ ಕಾಮಗಾರಿ ಕೈಗೆತ್ತಿಕೊಳ್ಳದಿದ್ದರೆ ಮಾರ್ಚ್ ಮೊದಲ ವಾರದಲ್ಲಿ ಹುಬ್ಬಳ್ಳಿಯಲ್ಲಿ ಟೆಂಟ್ ಹಾಕಿ ಪ್ರತಿಭಟನೆ ನಡೆಸಲಿದ್ದೇವೆ. ಈ ಭಾಗದ ವಿವಿಧ ಸಂಘಟನೆಗಳು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿವೆ. ಅಲ್ಲದೆ, ಉತ್ತರ ಕರ್ನಾಟಕ ಭಾಗಕ್ಕೆ ಪ್ರತ್ಯೇಕ ಬಜೆಟ್ ಮಂಡನೆ ಮಾಡಬೇಕು ಎಂದು ಆಗ್ರಹಿಸಲಾಗುವುದು ಎಂದು ತಿಳಿಸಿದರು.
ಸಮಿತಿಯ ಪದಾಧಿಕಾರಿಗಳಾದ ಬಿ.ಎ. ಮುಧೋಳ, ಎ.ಎಸ್. ಪೀರಜಾದೆ ಮತ್ತು ಬಾಬಾಜಾನ್ ಮುಧೋಳ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.