ಬೆಂಗಳೂರು: ‘ಕೋವಿಡ್ನಿಂದಾಗಿ ಅತಿಥಿ ಉಪನ್ಯಾಸಕರು ಬಹಳ ಸಂಕಷ್ಟ ಎದುರಿಸುತ್ತಿದ್ದು, ಅವರ ಸಹಾಯಕ್ಕಾಗಿ ಪ್ರತ್ಯೇಕ ನಿಧಿಯೊಂದನ್ನು ಸ್ಥಾಪಿಸಬೇಕು’ ಎಂದು ರಾಜ್ಯ ಶೈಕ್ಷಣಿಕ ದಿಕ್ಸೂಚಿ ಮತ್ತು ಸುಧಾರಣಾ ಸಮಿತಿ ಒತ್ತಾಯಿಸಿದೆ.
ಸಮಿತಿಯ ಅಧ್ಯಕ್ಷ ಡಾ.ಸುಧಾಕರ ಹೊಸಳ್ಳಿ ಮತ್ತು ದಕ್ಷಿಣ ಪದವೀಧರ ಕ್ಷೇತ್ರದ ನಿಕಟಪೂರ್ವ ಅಭ್ಯರ್ಥಿ ಮೈ.ವಿ.ರವಿಶಂಕರ್ ಅವರು ಈ ಸಂಬಂಧ ಮುಖ್ಯಮಂತ್ರಿ ಅವರಿಗೆ ಪತ್ರ ಬರೆದಿದ್ದು, ‘ಪ್ರತ್ಯೇಕ ನಿಧಿ ಸ್ಥಾಪಿಸಿದರೆ ಕಡ್ಡಾಯವಾಗಿ ಸಹಸ್ರಾರು ನೌಕರರು, ಅಧಿಕಾರಿಗಳು, ಉಪನ್ಯಾಸಕರು ಹಾಗೂ ಪ್ರಾಧ್ಯಾಪಕರು ಕೋವಿಡ್ ಮುಗಿಯುವವರೆಗೂ ತಮ್ಮ ಸಹಾಯಹಸ್ತ ನೀಡಬಹುದಾಗಿದೆ’ ಎಂದು ಹೇಳಿದ್ದಾರೆ.
‘ಕೋವಿಡ್ ಮುಗಿದ ನಂತರ ಹರಿಯಾಣ, ಮಹಾರಾಷ್ಟ್ರ, ಪಶ್ಚಿಮ ಬಂಗಾಳದ ಮಾದರಿಯಲ್ಲಿ ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದ್ದಾರೆ.
ಆತ್ಮಹತ್ಯೆ ತಪ್ಪಿಸಿ: ‘ಹಲವು ಅಸಂಘಟಿತ ವರ್ಗದ ಜನರಿಗೆ ವಿಶೇಷ ಪ್ಯಾಕೇಜ್ ನೀಡಿರುವ ಸರ್ಕಾರ ಅತಿಥಿ ಉಪನ್ಯಾಸಕರಿಗೂ ಅಂತಹ ಪ್ಯಾಕೇಜ್ ಘೋಷಿಸಬೇಕು. ಆರ್ಥಿಕ ಸಂಕಷ್ಟ ಮತ್ತು ಖಿನ್ನತೆಯಿಂದ ಈಗಾಗಲೇ ಕೆಲವರು ಆತ್ಮಹತ್ಯೆ ಮಾಡಿಕೊಂಡಿದ್ದು, ಇಂತಹ ಸಾವನ್ನು ಇನ್ನಾದರೂ ತಪ್ಪಿಸಬೇಕು’ ಎಂದು ಮನವಿ ಮಾಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.