ಬೆಂಗಳೂರು: ಮೂರು ಎಕರೆವರೆಗಿನ ಒತ್ತುವರಿ ಪ್ರಕರಣಗಳನ್ನು ತೆರವು ಕಾರ್ಯಾಚರಣೆ ವ್ಯಾಪ್ತಿಯಿಂದ ಕೈಬಿಡಬೇಕು. ಅರಣ್ಯವಾಸಿಗಳ ಪರ ಸುಪ್ರೀಂ ಕೋರ್ಟ್ಗೆ ರಾಜ್ಯ ಸರ್ಕಾರವೇ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆ ಅಧ್ಯಕ್ಷ ರವೀಂದ್ರ ನಾಯ್ಕ ಒತ್ತಾಯಿಸಿದರು.
ಕಾನೂನು ಸಚಿವ ಎಚ್.ಕೆ. ಪಾಟೀಲ ಅವರಿಗೆ ಬುಧವಾರ ಮನವಿ ಸಲ್ಲಿಸಿದ ನಂತರ ಮಾತನಾಡಿದ ಅವರು, ‘ಅರಣ್ಯವಾಸಿಗಳ ಪರ ರಾಜ್ಯ ಸರ್ಕಾರ ಈ ಹಿಂದೆ ಪ್ರಕಟಿಸಿದ ನಿಲುವಿನಂತೆ ನಡೆದುಕೊಳ್ಳಬೇಕು. ಒತ್ತುವರಿ ಭೂಮಿ, ಪಟ್ಟಾ ಭೂಮಿ ಸೇರಿ ಮೂರು ಎಕರೆಗಿಂತ ಕಡಿಮೆ ಇರುವ ಒತ್ತುವರಿ ತೆರವುಗೊಳಿಸದಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಸೂಚನೆ ಸ್ವಾಗತಾರ್ಹ. ಈ ಕುರಿತು ಸುಪ್ರೀಂಕೋರ್ಟ್ಗೂ ಮನವರಿಕೆ ಮಾಡಿಕೊಡಬೇಕು’ ಎಂದರು.
‘ಅರಣ್ಯ ಹಕ್ಕು ಕಾಯ್ದೆ ಅಡಿಯಲ್ಲಿ ಸಲ್ಲಿಕೆಯಾಗಿದ್ದ ಅರ್ಜಿಗಳು ತಿರಸ್ಕೃತವಾಗಿದ್ದರೆ, ಅಂತಹ ಅರ್ಜಿದಾರರನ್ನು ಅರಣ್ಯ ಪ್ರದೇಶದಿಂದ ಒಕ್ಕಲೆಬ್ಬಿಸಬೇಕು. ಅತಿಕ್ರಮಣ ಪ್ರದೇಶದಲ್ಲಿ ಮತ್ತೆ ಅರಣ್ಯ ಬೆಳೆಸಬೇಕು ಎಂದು ಕೋರಿ ಪರಿಸರವಾದಿಗಳು ಸುಪ್ರೀಂಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಈ ವಿಷಯದಲ್ಲಿ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಬೇಕು’ ಎಂದು ಒತ್ತಾಯಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.