ನವದೆಹಲಿ: ಬೆಂಗಳೂರು ದಕ್ಷಿಣ ಉತ್ತರಹಳ್ಳಿ ಹೋಬಳಿಯ ಹಲಗೆವಡೇರಹಳ್ಳಿ ಗ್ರಾಮದ ಡಿನೋಟಿಫಿಕೇಷನ್ಗೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ನೋಟಿಸ್ ನೀಡಿದೆ.
ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದ್ದನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿಗಳಾದ ಅಶೋಕ್ ಭೂಷಣ್ ಮತ್ತು ಎಂ.ಆರ್ ಷಾ ಅವರ ನ್ಯಾಯಪೀಠವು ರಾಜ್ಯ ಸರ್ಕಾರ ಮತ್ತು ದೂರುದಾರ ಎಂ.ಎಸ್. ಮಹಾದೇವ ಸ್ವಾಮಿ ಅವರಿಗೆ ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ. ಆರು ತಿಂಗಳ ಗಡುವು ನೀಡಿದೆ. 2018ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ 19 (1) (ಬಿ)ನಲ್ಲಿ ಮಾಡಿದ ತಿದ್ದುಪಡಿಯನ್ನು ಗಮನದಲ್ಲಿಟ್ಟುಕೊಂಡು, ಆ ಸಮಯದಲ್ಲಿ ಅರ್ಜಿದಾರರು ಹುದ್ದೆಯಲ್ಲಿಲ್ಲದಿದ್ದರೂ ಸಹ ಅನುಮತಿ ಅಗತ್ಯ ಎಂದು ಕುಮಾರಸ್ವಾಮಿ ಅವರ ಪರ ಹಾಜರಿದ್ದ ವಕೀಲರಂಜಿತ್ ಕುಮಾರ್ ಅವರು ವಾದಿಸಿದರು.
ಕುಮಾರಸ್ವಾಮಿ ಮತ್ತು ಇತರರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ನೋಂದಾಯಿಸಲು ವಿಶೇಷ ನ್ಯಾಯಾಲಯವು 2019ರ ಸೆಪ್ಟೆಂಬರ್ 4ರಂದು ನಿರ್ದೇಶನ ನೀಡಿತ್ತು. 2012ರಲ್ಲಿ ಸಲ್ಲಿಸಿದ ದೂರಿನಲ್ಲಿ ಎಲ್ಲಾ ಆರೋಪಿಗಳ ವಿರುದ್ಧ ಸಮನ್ಸ್ ಜಾರಿಗೊಳಿಸಲಾಗಿತ್ತು.
ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಅಧಿಕಾರವಧಿಯಲ್ಲಿ ಅಕ್ಟೋಬರ್ 3, 2007ರಂದು ಭೂಮಿಯನ್ನು ಡಿನೋಟಿಫೈ ಮಾಡುವ ಅಧಿಸೂಚನೆಯನ್ನು ಅಂಗೀಕರಿಸಿದರು ಮತ್ತು ಬೊಕ್ಕಸಕ್ಕೆ ನಷ್ಟವನ್ನುಂಟು ಮಾಡಿದರು ಎಂದು ಆರೋಪಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.