ಬೆಂಗಳೂರು:ಕನ್ನಡ ಭಾಷೆಗೆ ಅವಮಾನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಗೂಗಲ್ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬುಧವಾರ ಹೈಕೋರ್ಟ್ ವಜಾಗೊಳಿಸಿದೆ.
ವಿಚಾರಣೆ ನಡೆಸಿದ ನ್ಯಾಯಾಲಯ, ‘ಈ ಬಗ್ಗೆ ನಡೆದ ಘಟನೆಗೆ ಏನು ಕಾರಣ ಎಂದು ಗೂಗಲ್ ಸ್ಪಷ್ಟವಾಗಿ ನಮಗೆ ತಿಳಿಸಿದೆ. ಅಲ್ಲದೆ ಸಾರ್ವಜನಿಕವಾಗಿ ಕನ್ನಡಿಗರ ಕ್ಷಮೆ ಕೇಳಿದೆ. ಹೀಗಾಗಿ ಅರ್ಜಿಯನ್ನು ವಜಾಗೊಳಿಸಿದ್ದೇವೆ' ಎಂದು ಹೇಳಿದೆ. ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ಅವರನ್ನೊಳಗೊಂಡ ಪೀಠ ವಿಚಾರಣೆ ನಡೆಸಿತ್ತು.
ಗೂಗಲ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ₹10 ಕೋಟಿ ದಂಡ ವಿಧಿಸಿ ಅದನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ನೀಡಬೇಕು ಎಂದು ಹೈಕೋರ್ಟ್ಗೆ ಭ್ರಷ್ಟಾಚಾರ ವಿರೋಧಿ ಸಮಿತಿ ಭಾರತ್ ಟ್ರಸ್ಟ್ (ACCIT) ಎಂಬ ಸಂಸ್ಥೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿತ್ತು.
ಕೆಲವು ತಿಂಗಳ ಹಿಂದೆ, ಭಾರತದ ಅತ್ಯಂತ ಕುರೂಪಿ ಭಾಷೆ ಯಾವುದೆಂದು ಗೂಗಲ್ನಲ್ಲಿ ಹುಡುಕಿದರೆ ಕನ್ನಡ ಎಂಬ ಫಲಿತಾಂಶ ತೋರಿಸುತ್ತಿದ್ದುದು ವಿವಾದಕ್ಕೆ ಕಾರಣವಾಗಿತ್ತು. ಕನ್ನಡ ಅಭಿಮಾನಿಗಳು ಗೂಗಲ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.