ADVERTISEMENT

ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ: ಕುಮಾರಸ್ವಾಮಿ

​ಪ್ರಜಾವಾಣಿ ವಾರ್ತೆ
Published 31 ಆಗಸ್ಟ್ 2018, 19:30 IST
Last Updated 31 ಆಗಸ್ಟ್ 2018, 19:30 IST
   

ಬೆಂಗಳೂರು: ಕಾಂಗ್ರೆಸ್‌ ಹಿರಿಯ ನಾಯಕ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗುವ ಇಚ್ಛೆ ವ್ಯಕ್ತಪಡಿಸಿರುವ ಬೆನ್ನಲ್ಲೇ, ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರ ಹೆಸರನ್ನು ಪ್ರಸ್ತಾವಿಸುವ ಮೂಲಕ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚರ್ಚೆಗೆ ಮತ್ತೊಂದು ಆಯಾಮ ನೀಡಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ವ್ಯಕ್ತವಾಗಿವೆ.

‘ಕಾಂಗ್ರೆಸ್‌ನಲ್ಲಿ ಸಿದ್ದರಾಮಯ್ಯ ಮಾತ್ರವಲ್ಲ, ಮುಖ್ಯಮಂತ್ರಿ ಆಗುವ ಅರ್ಹತೆಯುಳ್ಳ ಸಾಕಷ್ಟು ನಾಯಕರು ಇದ್ದಾರೆ’ ಎಂಬ ಸಂದೇಶ ನೀಡುವ ಮುಖೇನ, ಆ ಪಕ್ಷದ ನಾಯಕರನ್ನು ಗೊಂದಲಕ್ಕೆ ತಳ್ಳುವ ಯತ್ನ ಇದಾಗಿದೆ ಎಂದು ಹೇಳಲಾಗುತ್ತಿದೆ.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಗುರುವಾರ ಮಾತನಾಡುವಾಗ, ಕಂದಾಯ ಸಚಿವ ಆರ್‌.ವಿ.ದೇಶಪಾಂಡೆ ಅವರಿಗೂ ಮುಖ್ಯಮಂತ್ರಿ ಆಗುವ ಅರ್ಹತೆ ಇದೆ ಎಂದು ದಾಳ ಉರುಳಿಸಿದ್ದರು.

ADVERTISEMENT

ಶುಕ್ರವಾರ ಈ ಕುರಿತು ಸ್ಪಷ್ಟನೆ ನೀಡಿದ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರದಲ್ಲಿ ಗೊಂದಲ ಸೃಷ್ಟಿಸುವ ಅಗತ್ಯವಿಲ್ಲ.ಕುಮಾರಸ್ವಾಮಿ ಹೇಳಿಕೆಗೆ ವಿಶೇಷ ಅರ್ಥ ಕಲ್ಪಿಸಬೇಕಾಗಿಲ್ಲ ಎಂದರು.

‘ಧರ್ಮಸಿಂಗ್ ಅವರು ಮುಖ್ಯಮಂತ್ರಿ ಆಗುವ ಸಂದರ್ಭದಲ್ಲೇ ಆರ್.ವಿ.ದೇಶಪಾಂಡೆ ಹೆಸರು ಕೇಳಿ ಬಂದಿತ್ತು. ಅವರು ಕೂಡ ಅನುಭವಿ. ಕೈಗಾರಿಕಾ ಸಚಿವರಾಗಿ ಸಾಕಷ್ಟು ಅನುಭವ ಪಡೆದಿದ್ದಾರೆ. ಹಾಗಾಗಿ ಅವರ ಹೆಸರು ಈಗ ಮತ್ತೆ ಮುಂಚೂಣಿಗೆ ಬಂದಿದೆ. ಅದರಲ್ಲಿ ತಪ್ಪೇನಿದೆ? ದಿವಂಗತ ರಾಮಕೃಷ್ಣ ಹೆಗಡೆ ಅವರ ಸಂಪುಟದಲ್ಲಿ ದೇಶಪಾಂಡೆ ಮತ್ತು ನಾನು ಒಟ್ಟಿಗೇ ಕೆಲಸ ಮಾಡಿದ್ದೆವು’ ಎಂದರು.

ಬ್ರಿಟಿಷ್‌ ಹೈಕಮಿಷನರ್‌ ಭೇಟಿ: ಬ್ರಿಟಿಷ್‌ ಹೈಕಮಿಷನರ್‌ ಡೊನಾಲ್ಡ್‌ ಮೈಕ್ ಅಲಿಸ್ಟರ್‌ ಅವರು ದೇವೇಗೌಡ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.

ರಾಜ್ಯ ರಾಜಕೀಯದಲ್ಲಿರುವ ಗೊಂದಲಗಳ ಬಗ್ಗೆ ಚರ್ಚೆ ನಡೆಸಲೆಂದೇ ಅವರು ಭೇಟಿ ಆಗಿದ್ದರು. ಕರ್ನಾಟಕವಲ್ಲದೆ, ಇತರ ರಾಜ್ಯಗಳ ರಾಜಕೀಯ ವಿದ್ಯಮಾನಗಳ ಬಗ್ಗೆ ಮಾಹಿತಿ ಪಡೆದರು ಎಂದು ದೇವೇಗೌಡ ತಿಳಿಸಿದರು.

ಸಮ್ಮಿಶ್ರ ಸರ್ಕಾರ ಪತನವಾಗುತ್ತದೆ ಎಂಬ ವದಂತಿ ಹರಡಿರುವ ವಿಚಾರವನ್ನೂ ಡೊನಾಲ್ಡ್‌ ಮೈಕ್‌ ಪ್ರಸ್ತಾಪಿಸಿದರು. ಸರ್ಕಾರ ಪತನವಾಗುವ ಸಾಧ್ಯತೆ ಇಲ್ಲ, ಬಿಜೆಪಿಗೆ ಅಧಿಕಾರ ಬಿಟ್ಟುಕೊಡಲು ಜೆಡಿಎಸ್‌ ಮತ್ತು ಕಾಂಗ್ರೆಸ್‌ ಪಕ್ಷಗಳು ಸಿದ್ಧವಿಲ್ಲ ಎಂಬುದನ್ನು ಅವರ
ಗಮನಕ್ಕೆ ತರಲಾಯಿತು ಎಂದು ಹೇಳಿದರು.

ಭಾರಿ ಬದಲಾವಣೆ: ಇಬ್ರಾಹಿಂ ಭವಿಷ್ಯ

ಬೆಂಗಳೂರು: ‘ಗಣೇಶ ಹಬ್ಬದ ಬಳಿಕ ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳಾಗಲಿದ್ದು, ನನಗೆ ದೊಡ್ಡ ಗಂಟು ಸಿಗಲಿದೆ’ ಎಂದು ಹಿರಿಯ ಕಾಂಗ್ರೆಸ್‌ ಮುಖಂಡ ಸಿ.ಎಂ. ಇಬ್ರಾಹಿಂ ಭವಿಷ್ಯ ನುಡಿದರು.

‘ಜೆಡಿಎಸ್‌ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ನಮ್ಮ ಸಮುದಾಯಕ್ಕೆ ಉನ್ನತ ಸ್ಥಾನ ಸಿಕ್ಕಿಲ್ಲ. ಮಹತ್ವದ ನಿರ್ಧಾರ ಕೈಗೊಳ್ಳುವ ಅಧಿಕಾರ ಕೊಟ್ಟಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.