ADVERTISEMENT

ದೇವನಹಳ್ಳಿ– ವಿಜಯಪುರ ಅವಳಿ ನಗರವಾಗಿ ಅಭಿವೃದ್ಧಿ: ಆರ್‌. ಅಶೋಕ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 12:22 IST
Last Updated 5 ಫೆಬ್ರುವರಿ 2021, 12:22 IST
ಸಚಿವ ಆರ್‌.ಅಶೋಕ
ಸಚಿವ ಆರ್‌.ಅಶೋಕ    

ಬೆಂಗಳೂರು: ಹುಬ್ಬಳ್ಳಿ–ಧಾರವಾಡ ಅವಳಿ ನಗರಗಳ ಮಾದರಿಯಲ್ಲಿ ದೇವನಹಳ್ಳಿ ಮತ್ತು ವಿಜಯಪುರವನ್ನು ಅಭಿವೃದ್ಧಿಪಡಿಸಲು ಸರ್ಕಾರ ಸಿದ್ಧವಿದ್ದು, ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಕಳುಹಿಸುವಂತೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಸಚಿವರೂ ಆಗಿರುವ ಕಂದಾಯ ಸಚಿವ ಆರ್‌.ಅಶೋಕ ಸಲಹೆ ನೀಡಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ನಿಸರ್ಗ ನಾರಾಯಣಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಸದ್ಯವೇ ಜನಗಣತಿ ನಡೆಯಲಿರುವುದರಿಂದ ಅದು ಮುಗಿಯುವವರೆಗೆ ಗಡಿ ಬದಲಾವಣೆ ಮತ್ತು ಸ್ಥಳೀಯ ಸಂಸ್ಥೆಗಳನ್ನು ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ ಎಂದರು.

ದೇವನಹಳ್ಳಿ ಮತ್ತು ವಿಜಯಪುರ ಪುರಸಭೆಗಳನ್ನು ನಗರಸಭೆಗಳನ್ನಾಗಿ ಮೇಲ್ದರ್ಜೆಗೇರಿಸಲು ಪ್ರಸ್ತಾವನೆ ಬಂದಿಲ್ಲ. ನಗರಸಭೆಯಾಗಿ ಮೇಲ್ದರ್ಜೆಗೇರಿಸುವ ವಿಚಾರದಲ್ಲೂ ಪ್ರಸ್ತಾವನೆ ಸಲ್ಲಿಸುವುದು ಅಗತ್ಯ. ಇವೆರಡೂ ಪುರಸಭೆಗಳ ವ್ಯಾಪ್ತಿಯಲ್ಲಿ ಒಳಚರಂಡಿ ವ್ಯವಸ್ಥೆ ಇಲ್ಲ. ಈ ವ್ಯವಸ್ಥೆ ಆಗುವವರೆಗೆ ಮಲ ತ್ಯಾಜ್ಯ ಕಲ್ಮಷಗಳನ್ನು ಸಂಸ್ಕರಿಸುವ ಘಟಕಗಳನ್ನು ಅಳವಡಿಸಲಾಗಿದೆ ಪೌರಾಡಳಿತ ಸಚಿವ ಎಂಟಿಬಿ ನಾಗರಾಜ್ ತಿಳಿಸಿದರು.

ADVERTISEMENT

ಹೊಸಕೋಟೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಲಾಗಿದೆ. ಆದರೆ, ದೇವನಹಳ್ಳಿ ಮತ್ತು ವಿಜಯಪುರದ ಅಭಿವೃದ್ಧಿ ಬಗ್ಗೆ ಯಾರೂ ಗಮನಹರಿಸಿಲ್ಲ. ಇವೆರಡನ್ನೂ ಹುಬ್ಬಳ್ಳಿ–ಧಾರವಾಡದ ಮಾದರಿಯಲ್ಲಿ ಅಭಿವೃದ್ಧಿಪಡಿಸಬೇಕು ಎಂದು ನಿಸರ್ಗ ನಾರಾಯಣಸ್ವಾಮಿ ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.