ADVERTISEMENT

ಆಸ್ಪತ್ರೆಯಿಂದ ಪರಾರಿಯಾಗಿದ್ದ ಸೋಂಕು ಶಂಕಿತ

ದೇವನಹಳ್ಳಿ ಪೊಲೀಸರಿಗೆ ಸಿಕ್ಕಿಬಿದ್ದ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2020, 9:21 IST
Last Updated 28 ಮಾರ್ಚ್ 2020, 9:21 IST
   

ಬೆಂಗಳೂರು: ಕೊರೊನಾ ವೈರಾಣು ಸೋಂಕು ತಗುಲಿದ್ದ ಶಂಕೆ ಮೇರೆಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದ ಶಂಕಿತನೊಬ್ಬ ಪರಾರಿಯಾಗಿ, ನಂತರ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ದೇವನಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ತಮಿಳುನಾಡಿನ ಕೊಯಮತ್ತೂರಿನ 64 ವರ್ಷದ ವೃದ್ದ, ಇತ್ತೀಚೆಗಷ್ಟೇ ಆಸ್ಟ್ರೇಲಿಯಾಗೆ ಹೋಗಿದ್ದರು. ಇದೇ 20ರಂದು ವಿಮಾನದ ಮೂಲಕ ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದರು.

ನಿಲ್ದಾಣದಲ್ಲೇ ಆತನನ್ನು ಆರೋಗ್ಯ ಇಲಾಖೆ ಅಧಿಕಾರಿಗಳು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ್ದರು. ಸೋಂಕಿನ ಕೆಲ ಲಕ್ಷಣಗಳು ಅವರಲ್ಲಿ ಕಂಡುಬಂದಿದ್ದವು. ಹೀಗಾಗಿ, ಸಮೀಪದ ಆಕಾಶ್ ಆಸ್ಪತ್ರೆಗೂ ಕರೆದೊಯ್ದು ತಪಾಸಣೆ ಮಾಡಿಸಿದ್ದರು. ನಂತರ, ಬಿದರಹಳ್ಳಿಯ ಈಸ್ಟ್ ಪಾಯಿಂಟ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಂತೆ ಅವರಿಗೆ ತಿಳಿಸಿ ಅಲ್ಲಿಯೇ ದಾಖಲಿಸಲಾಗಿತ್ತು.

ADVERTISEMENT

ವೈದ್ಯರ ಮಾತನ್ನೇ ನಿರ್ಲಕ್ಷಿಸಿದ್ಧ ವೃದ್ಧ, ಮೊದಲ ದಿನವೇ ಆಸ್ಪತ್ರೆಯಿಂದ ಪರಾರಿಯಾಗಿದ್ದರು. ಇದರಿಂದ ಆಸ್ಪತ್ರೆಯಲ್ಲಿ ಆತಂಕ ಉಂಟಾಗಿತ್ತು. ನಂತರ, ವೃದ್ಧ ಪರಾರಿಯಾದ ಬಗ್ಗೆ ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಅವರು ದೇವನಹಳ್ಳಿ ಠಾಣೆಗೆ ದೂರು ನೀಡಿದ್ದರು.

ತ್ವರಿತವಾಗಿ ತನಿಖೆ ಆರಂಭಿಸಿದ ಪೊಲೀಸರು, ಕೆಲವೇ ಗಂಟೆಗಳಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದು ಪುನಃ ಆಸ್ಪತ್ರೆಗೆ ಸೇರಿಸಿದ್ದಾರೆ. ಹೋಂ ಕ್ವಾರಂಟೈನ್ ನಿಯಮ ಉಲ್ಲಂಘಿಸಿದ ಆರೋಪದಡಿ ವೃದ್ಧನ ವಿರುದ್ಧ ಪ್ರಕರಣವನ್ನೂ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.