ADVERTISEMENT

ರಾಷ್ಟ್ರಪತಿ ಸ್ಥಾನಕ್ಕೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ: ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2022, 14:53 IST
Last Updated 17 ಜೂನ್ 2022, 14:53 IST
ಸಭೆಯೊಂದರಲ್ಲಿ ಎಚ್‌.ಡಿ ದೇವೇಗೌಡ ಮತ್ತು ಎಚ್‌.ಡಿ ಕುಮಾರಸ್ವಾಮಿ
ಸಭೆಯೊಂದರಲ್ಲಿ ಎಚ್‌.ಡಿ ದೇವೇಗೌಡ ಮತ್ತು ಎಚ್‌.ಡಿ ಕುಮಾರಸ್ವಾಮಿ    

ಬೆಂಗಳೂರು : ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಶುಕ್ರವಾರ ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಹಾಗೂ ‘ಜನತಾ ಮಿತ್ರ’ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕರೆದಿದ್ದ ಸಭೆಗೂ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.

ADVERTISEMENT

ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.