ಸಾಗರ: ರಾಜ್ಯದ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದೆಹಲಿ ಸರ್ಕಾರ ಅನುಸರಿಸಿರುವ ಮಾದರಿಯನ್ನು ಅಳವಡಿಸಿಕೊಳ್ಳಲು ಚಿಂತನೆ ನಡೆದಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಕೆಳದಿ ಗ್ರಾಮದಲ್ಲಿ ಶುಕ್ರವಾರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭ ಉದ್ಘಾಟಿಸಿದ ಅವರು, ‘ದೆಹಲಿಯಲ್ಲಿ ಸರ್ಕಾರಿ ಶಾಲೆಗಳ ಬೆಳವಣಿಗೆಗೆ ಅಲ್ಲಿನ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಪ್ರಶಂಸೆಯ ಮಾತುಗಳು ಕೇಳಿಬರುತ್ತಿವೆ. ಅಲ್ಲಿನ ಮಾದರಿ ನಮ್ಮ ರಾಜ್ಯಕ್ಕೆ ಎಷ್ಟರಮಟ್ಟಿಗೆ ಸೂಕ್ತವಾಗಲಿದೆ ಎಂಬುದರ ಬಗ್ಗೆ ಅವಲೋಕನ ನಡೆಸಲಾಗುವುದು’ ಎಂದರು.
‘ದೆಹಲಿಯ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರು ಸರ್ಕಾರಿ ಶಾಲೆಗಳನ್ನು ಉತ್ಕೃಷ್ಟವಾಗಿ ಅಭಿವೃದ್ಧಿಗೊಳಿಸುವ ಕುರಿತು ‘ಶಿಕ್ಷಾ’ ಎಂಬ ಕೃತಿಯನ್ನು ರಚಿಸಿದ್ದಾರೆ. ಈ ಕೃತಿಯಲ್ಲಿನ ಕೆಲವು ಅಂಶಗಳನ್ನು ನಮ್ಮ ಶಿಕ್ಷಣ ನೀತಿಯಲ್ಲಿ ಅಳವಡಿಸಲು ಪ್ರಯತ್ನಿಸಲಾಗುವುದು. ದೆಹಲಿಯಲ್ಲಿ ಕೇವಲ 473 ಸರ್ಕಾರಿ ಶಾಲೆಗಳಿವೆ. ಕರ್ನಾಟಕದಲ್ಲಿ 53 ಸಾವಿರ ಸರ್ಕಾರಿ ಶಾಲೆಗಳಿವೆ. ಈ ಅಂಶಗಳನ್ನು ಪರಿಗಣಿಸಿ ದೆಹಲಿ ಮಾದರಿಯನ್ನುಯಾವ ರೀತಿ ಅನುಸರಿಸಬಹುದು ಎಂಬ ಬಗ್ಗೆ ತಜ್ಞರ ಜೊತೆ ಚರ್ಚಿಸಲಾಗುವುದು’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.