ಬೆಂಗಳೂರು: ‘ಧರ್ಮಸ್ಥಳ ಪ್ರದೇಶದಲ್ಲಿ ನೂರಾರು ಅತ್ಯಾಚಾರ, ಹತ್ಯೆ ಮತ್ತು ಕಾಡಿನಲ್ಲಿ ಶವಗಳನ್ನು ಹೂಳಿರುವ ಆರೋಪದ ತನಿಖೆಗೆ ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ’ ಎಂದು ಹಲವು ವಕೀಲರು ಮತ್ತು ಸಾಮಾಜಿಕ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಿ.ಎಸ್.ದ್ವಾರಕನಾಥ್, ಎಸ್.ಬಾಲನ್, ಉಮಾಪತಿ ಎಸ್. ಮೊದಲಾದವರು, ಈ ಕುರಿತ ಪತ್ರವನ್ನು ನೀಡಿದರು.
‘ಧರ್ಮಸ್ಥಳದಲ್ಲಿ ಸಾಮೂಹಿಕ ಅತ್ಯಾಚಾರಗಳು, ಹತ್ಯೆಗಳು ನಡೆದಿವೆ. ನೂರಾರು ಶವಗಳನ್ನು ಸುತ್ತಮುತ್ತಲ ಅರಣ್ಯ ಪ್ರದೇಶದಲ್ಲಿ ಹೂಳಲಾಗಿದೆ ಎಂಬ ವಿವರ ಇರುವ ವರದಿಗಳು ಸುದ್ದಿ ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಬಿತ್ತರವಾಗಿವೆ. ಈ ಗಂಭೀರ ವಿಷಯದತ್ತ ನೀವು ಗಮನ ಹರಿಸಬೇಕು’ ಎಂದು ಕೋರಿದ್ದಾರೆ.
‘ಒಬ್ಬ ಸಾಕ್ಷಿಯು ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರಾಗಿ, ಕಳೇಬರದ ಮಾಹಿತಿಯನ್ನು ಸಲ್ಲಿಸಿದ್ದಾನೆ. ಜತೆಗೆ ನೂರಾರು ಶವಗಳು ಇರುವ ಸ್ಥಳವನ್ನು ತೋರಿಸುತ್ತೇನೆ ಎಂದಿದ್ದಾನೆ. ನ್ಯಾಯಾಲಯದಲ್ಲಿ ಹೇಳಿಕೆ ದಾಖಲಿಸಿದ ನಂತರವಷ್ಟೇ ಎಫ್ಐಆರ್ ದಾಖಲಿಸಲಾಗಿದೆ. ಆದರೆ ಶವಗಳನ್ನು ಹುಡುಕಿ, ಹೊರತೆಗೆಯುವ ಕೆಲಸ ಇನ್ನೂ ಆರಂಭವಾಗಿಲ್ಲ’ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
‘ಅತ್ಯಂತ ಪ್ರಭಾವಿ, ರಾಜಕೀಯ ನಂಟು ಇರುವ ವ್ಯಕ್ತಿಗಳ ವಿರುದ್ಧ ಆರೋಪ ಎದುರಾಗಿದೆ. ಆದರೆ ತನಿಖೆ ನಡೆಸುತ್ತಿರುವುದು ಸಬ್ ಇನ್ಸ್ಪೆಕ್ಟರ್ ದರ್ಜೆಯ ಅಧಿಕಾರಿ. ಆರೋಪಿಗಳು ತನಿಖೆಯನ್ನು ಪ್ರಭಾವಿಸುವ, ಸಾಕ್ಷ್ಯಗಳನ್ನು ನಾಶಪಡಿಸುವ ಅಪಾಯವಿದೆ. ಹೀಗಾಗಿ ನಿವೃತ್ತ ನ್ಯಾಯಮೂರ್ತಿಗಳ ಮೇಲ್ವಿಚಾರಣೆಯಲ್ಲಿ ಎಸ್ಐಟಿ ತನಿಖೆ ನಡೆಯಬೇಕು. ಎಡಿಜಿಪಿ ಒಬ್ಬರನ್ನು ತನಿಖಾ ತಂಡದ ಮುಖ್ಯಸ್ಥರಾಗಿ ನೇಮಕ ಮಾಡಬೇಕು’ ಎಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.