
ಬೆಂಗಳೂರು: ಧರ್ಮಸ್ಥಳದಲ್ಲಿ 1990ರಿಂದ 2021ರ ಮಧ್ಯದ ಅವಧಿಯಲ್ಲಿ ಸಂಭವಿಸಿವೆ ಎನ್ನಲಾದ 74 ಅಸಹಜ ಸಾವು ಪ್ರಕರಣಗಳ ಈಗಿನ ವಸ್ತುಸ್ಥಿತಿ, ಈ ಸಂಬಂಧ ಈವರೆವಿಗೂ ಕೈಗೊಳ್ಳಲಾದ ಕ್ರಮಗಳು ಹಾಗೂ ಮುಂದೆ ಕೈಗೊಳ್ಳಬೇಕೆಂದಿರುವ ಕ್ರಮಗಳ ಕುರಿತು ಎರಡು ವಾರಗಳಲ್ಲಿ ವಿವರಣೆ ನೀಡಿ’ ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ.
‘ಧರ್ಮಸ್ಥಳದಲ್ಲಿ 2012ರಲ್ಲಿ ಸಾಮೂಹಿಕ ಅತ್ಯಾಚಾರಕ್ಕೆ ಈಡಾಗಿ ಕೊಲೆಯಾಗಿದ್ದಾರೆ’ ಎನ್ನಲಾದ ವಿದ್ಯಾರ್ಥಿನಿ ಸೌಜನ್ಯಾ ತಾಯಿ ಕುಸುಮಾವತಿ (48) ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ ಶೆಟ್ಟಿ, ‘ಅರ್ಜಿಯಲ್ಲಿ 74 ಪ್ರಕರಣಗಳ ವಿಚಾರ ಪ್ರಸ್ತಾಪಿಸಲಾಗಿದೆ. ಯಾವ ಪ್ರಕರಣ ಯಾವ ಹಂತದಲ್ಲಿದೆ, ಈವರೆಗೆ ಏನಾಗಿದೆ ಎಂಬುದರ ಮಾಹಿತಿ ಪಡೆದು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ಸಂಪೂರ್ಣ ವಿವರಗಳನ್ನು ಒದಗಿಸಲಾಗುವುದು’ ಎಂದು ತಿಳಿಸಿದರು.
ಅರ್ಜಿದಾರರ ಪರ ಹೈಕೋರ್ಟ್ ವಕೀಲ ಎಸ್.ಬಾಲನ್, ‘ಎಲ್ಲಾ 74 ಪ್ರಕರಣಗಳೂ ತನಿಖೆಗೆ ಒಳಪಡಿಸಬೇಕಾದ ಪ್ರಕರಣಗಳಾಗಿವೆ’ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಮೊದಲು ಸರ್ಕಾರದಿಂದ ಮಾಹಿತಿ ಬರಲಿ’ ಎಂದು ಹೇಳಿತು. ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ ನ್ಯಾಯಪೀಠ ವಿಚಾರಣೆಯನ್ನು ಇದೇ 19ಕ್ಕೆ ಮುಂದೂಡಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.