ಬೆಳಗಾವಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚಿಸುತ್ತೇನೆ. ನಾನೇನು ಸಂದೇಶ ತಂದಿದ್ದೇನೆ ಎನ್ನುವುದನ್ನು ಬಹಿರಂಗವಾಗಿ ಹೇಳಲಾಗುವುದಿಲ್ಲ. ಅದನ್ನು ಆಂತರಿಕವಾಗಿ ಚರ್ಚೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಇಲ್ಲಿ ಶುಕ್ರವಾರ ಹೇಳಿದರು.
ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಪಕ್ಷದ ಸಂಘಟನೆ ಹಾಗೂ ಈಚಿನ ಬೆಳವಣಿಗೆಗಳ ಕುರಿತು ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.
ಕರ್ನಾಟಕದ ಪ್ರಭಾರಿಯಾಗಿ ಇದೇ ಮೊದಲಿಗೆ ಭೇಟಿ ನೀಡಿದ್ದೇನೆ. ಈ ರಾಜ್ಯದ ಪಕ್ಷದ ಉಸ್ತುವಾರಿ ಆಗಿರುವುದು ನನ್ನ ಸೌಭಾಗ್ಯ. ಪಕ್ಷ ಬಲವರ್ಧನೆ, ರೈತರಿಗಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾಡಿರುವ ಯೋಜನೆಗಳನ್ನು ತಿಳಿಸಿ ಗ್ರಾಮೀಣ ಪ್ರದೇಶಗಳಲ್ಲಿ ಇನ್ನೂ ಸದೃಢಗೊಳಿಸಲಾಗುವುದು. ಇದಕ್ಕಾಗಿ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ ಎಂದರು.
ದಕ್ಷಿಣ ಭಾರತದಲ್ಲಿ ಕರ್ನಾಟಕವು ಪಕ್ಷಕ್ಕೆ ಮಹತ್ವಪೂರ್ಣವಾದ ಸ್ಥಳವಾಗಿದೆ. ಬದ್ಧತೆಯುಳ್ಳ ಕಾರ್ಯಕರ್ತರು ಇದ್ದಾರೆ. ಇಲ್ಲಿ ಪಕ್ಷ ಬಲವರ್ಧನೆ ಮಾಡಿದರೆ ದಕ್ಷಿಣ ಭಾರತದ ಇತರ ರಾಜ್ಯಗಳಲ್ಲೂ ಅಧಿಕಾರ ಪಡೆಯುವುದು ಸುಲಭವಾಗಲಿದೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.