ಹೊಸಪೇಟೆ: ‘ರಾಜ್ಯ ಸರ್ಕಾರ ಅನರ್ಹರ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಕೊಟ್ಟರೆ ತಪ್ಪೇನಿದೆ. ಆ ಕ್ಷೇತ್ರಗಳು ರಾಜ್ಯದಲ್ಲಿಲ್ಲವೇ’ ಎಂದು ಅರಣ್ಯ, ಪರಿಸರ, ಜೀವಶಾಸ್ತ್ರ, ಗಣಿ ಮತ್ತು ಭೂವಿಜ್ಞಾನ ಸಚಿವ ಸಿ.ಸಿ. ಪಾಟೀಲ ಪ್ರಶ್ನಿಸಿದರು.
ತಾಲ್ಲೂಕಿನ ಕಮಲಾಪುರ ಬಳಿಯ ಅಟಲ್ ಬಿಹಾರಿ ವಾಜಪೇಯಿ ಜೈವಿಕ ಉದ್ಯಾನದಲ್ಲಿ ಶನಿವಾರ ಹಂಪಿ ಮೃಗಾಲಯದ ಪ್ರಾಣಿ, ಪಕ್ಷಿಗಳ ಆವರಣ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮುಂದೆ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಿದಾಗ ಎಲ್ಲ ಕ್ಷೇತ್ರಗಳಿಗೂ ಸಮಾನ ಅನುದಾನ ಬಿಡುಗಡೆಮಾಡಲಾಗುವುದು. ಅನುದಾನದ ವಿಷಯದಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಸಿದ್ದರಾಮಯ್ಯನವರು ನಮ್ಮನ್ನು ಹೊಗಳುತ್ತಾರೆ ಎಂದು ನಿರೀಕ್ಷೆ ಇಟ್ಟುಕೊಳ್ಳುವುದು ತಪ್ಪಾಗುತ್ತದೆ’ ಎಂದರು.
‘ಸರ್ಕಾರ ತನ್ನ ಸಂಪೂರ್ಣ ಗಮನವನ್ನು ನೆರೆ ಸಂತ್ರಸ್ತರಿಗೆ ಬದುಕು ಕಟ್ಟಿಕೊಡುವತ್ತ ನೆಟ್ಟಿದೆ. ಮನೆ ಕಟ್ಟಿಸಿಕೊಳ್ಳಲು ಮೊದಲ ಹಂತದಲ್ಲೇ ₹5 ಲಕ್ಷ ಪರಿಹಾರ ಬಿಡುಗಡೆ ಮಾಡಿರುವ ದೇಶದ ಮೊದಲ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು’ ಎಂದು ಕೊಂಡಾಡಿದರು.
ಯಡಿಯೂರಪ್ಪನವರು ಅಸಹಾಯಕರಾಗಿ ಮಾತನಾಡಿರುವ ವಿಡಿಯೊ ವೈರಲ್ ಆಗಿರುವ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ‘ಎಲ್ಲ ರೀತಿಯ ಗೊಂದಲಗಳನ್ನು ಬಗೆಹರಿಸುವ ಸಾಮರ್ಥ್ಯ ಯಡಿಯೂರಪ್ಪನವರಿಗಿದೆ. ಅವರು ಹಾಗೂ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರು ಸಮಾಲೋಚಿಸಿ ಎಲ್ಲ ಗೊಂದಲಗಳನ್ನು ದೂರ ಮಾಡುತ್ತಾರೆ. ಬರುವ ಉಪಚುನಾವಣೆಯಲ್ಲಿ 10ರಿಂದ 12 ಸ್ಥಾನಗಳಲ್ಲಿ ಗೆದ್ದೆ ಗೆಲ್ಲುತ್ತೇವೆ’ ಎಂದು ಭರವಸೆ ವ್ಯಕ್ತಪಡಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.