ADVERTISEMENT

ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳಿಗೆ ಪತ್ರ ಬರೆಯಿರಿ: ಸಚಿವ ಸುರೇಶ್‌ಕುಮಾರ್

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2021, 19:41 IST
Last Updated 17 ಏಪ್ರಿಲ್ 2021, 19:41 IST
ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಮಾರ್ಗದರ್ಶಿ ಪುಸ್ತಕಗಳನ್ನು ಚಿಕ್ಕಮಗಳೂರಿನಲ್ಲಿ ಸಚಿವ ಸುರೇಶ್‌ಕುಮಾರ್‌ ಬಿಡುಗಡೆ ಮಾಡಿದರು
ಎಸ್ಸೆಸ್ಸೆಲ್ಸಿ ಪರೀಕ್ಷೆ ತಯಾರಿ ಮಾರ್ಗದರ್ಶಿ ಪುಸ್ತಕಗಳನ್ನು ಚಿಕ್ಕಮಗಳೂರಿನಲ್ಲಿ ಸಚಿವ ಸುರೇಶ್‌ಕುಮಾರ್‌ ಬಿಡುಗಡೆ ಮಾಡಿದರು   

ಚಿಕ್ಕಮಗಳೂರು: ‘ಜಿಲ್ಲಾಧಿಕಾರಿಗಳು ಜಿಲ್ಲೆಯ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಪತ್ರ ಬರೆದು ಆತ್ಮಸ್ಥೈರ್ಯ ತುಂಬುವ ಶ್ರೇಷ್ಠ ಕಾರ್ಯ ಮಾಡಬೇಕು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ಶನಿವಾರ ಸಲಹೆ ನೀಡಿದರು.

ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ಸಿದ್ಧತೆ ಕುರಿತು ನಗರದಲ್ಲಿ ಏರ್ಪಡಿಸಿದ್ದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಜಿಲ್ಲೆಗಳ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

ಚಿಕ್ಕಮಗಳೂರು ಜಿಲ್ಲಾಧಿಕಾರಿ ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕು. ತುಮಕೂರು ಜಿಲ್ಲೆಯ ಕೊರಟಗೆರೆಯ ಕ್ಷೇತ್ರ ಶಿಕ್ಷಣಾಧಿಕಾರಿ ತಾಲ್ಲೂಕಿನಎಲ್ಲ ವಿದ್ಯಾರ್ಥಿಗಳಿಗೆ ಪತ್ರಬರೆದಿದ್ದಾರೆ. ಆತ್ಮಸ್ಥೈರ್ಯ ತುಂಬುವ ಹಾಗೂ ಆಹಾರ ಸೇವನೆ, ಅಭ್ಯಾಸ ಕ್ರಮ, ನಿದ್ರೆ, ಆರೋಗ್ಯ ಕಾಪಾಡಿಕೊಳ್ಳುವ ಕುರಿತು ಪತ್ರದಲ್ಲಿ ಸಲಹೆಗಳನ್ನು ನೀಡಿದ್ದಾರೆ. ಎಲ್ಲ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಇದನ್ನು ಅನುಸರಿಸುವುದು ಒಳಿತು’ ಎಂದರು.

ADVERTISEMENT

‘ಒಬ್ಬ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತವಾಗಬಾರದು ಎಂಬುದು ನಮ್ಮ ಉದ್ದೇಶ. ಎಸ್ಸೆಸ್ಸೆಲ್ಸಿ, ಪಿಯು ಪರೀಕ್ಷೆ ಮಾಡುವುದು ಸರ್ಕಾರಕ್ಕೆ ಪ್ರತಿಷ್ಠೆಯಲ್ಲ. ಅದು ಕರ್ತವ್ಯದ ಭಾಗ. 1ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಮಾಡಬೇಕೇ, ಬೇಡವೇ ಎಂದು ಎರಡು ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು’ ಎಂದು ಅವರು ಹೇಳಿದರು.

‘ಪ್ರಜಾವಾಣಿ’ ಸಂಪಾದಕೀಯ ಪ್ರಸ್ತಾಪ

‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ತೋರಿದ ಶಿಸ್ತು ರಾಜ್ಯದ ಎಲ್ಲ ಹಿರಿಯರಿಗೆ ಮಾದರಿ’ ಎಂದು ಕಳೆದ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಬಳಿಕ ‘ಪ್ರಜಾವಾಣಿ’ ಸಂಪಾದಕೀಯದಲ್ಲಿ ಬರೆದಿದ್ದರು ಎಂದು ಸಭೆಯಲ್ಲಿ ಸಚಿವ ಸುರೇಶ್‌ಕುಮಾರ್‌ ಪ್ರಸ್ತಾಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.