ADVERTISEMENT

ಜಿ.ಪಂ–ತಾ.ಪಂ ಮೀಸಲು: ಪುನಃ ಸಮಯ ಕೋರಿದ ಸರ್ಕಾರ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2024, 0:30 IST
Last Updated 28 ನವೆಂಬರ್ 2024, 0:30 IST
<div class="paragraphs"><p>ಕಡತ</p></div>

ಕಡತ

   

(ಸಾಂದರ್ಭಿಕ ಚಿತ್ರ)

ಬೆಂಗಳೂರು: ‘ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಮೀಸಲಾತಿ ನಿಗದಿಪಡಿಸುವ ಪ್ರಕ್ರಿಯೆಯನ್ನು ಆಖೈರುಗೊಳಿಸಲು ಇನ್ನಷ್ಟು ಕಾಲಾವಕಾಶ ನೀಡಬೇಕು’ ಎಂದು ರಾಜ್ಯ ಸರ್ಕಾರ, ಹೈಕೋರ್ಟ್‌ಗೆ ಪುನಃ ಮನವಿ ಮಾಡಿದೆ.

ADVERTISEMENT

ಈ ಸಂಬಂಧ ರಾಜ್ಯ ಚುನಾವಣಾ ಆಯೋಗ ಮತ್ತು ಇತರರು ಸಲ್ಲಿಸಿರುವ ಪ್ರತ್ಯೇಕ ಸಿವಿಲ್‌ ನ್ಯಾಯಾಂಗ ನಿಂದನೆ ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಸರ್ಕಾರದ ಪರ ಹಾಜರಾಗಿದ್ದ ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ ಪ್ರತಿಮಾ ಹೊನ್ನಾಪುರ, ‘ ಕ್ಷೇತ್ರ ಪುನರ್ ವಿಂಗಡಣೆ ಮುಗಿದಿದೆ. ಪುನರ್‌ ವಿಂಗಡಣೆ ಆದ ಕ್ಷೇತ್ರಗಳ ವಾರ್ಡ್‌ವಾರು ಮೀಸಲಾತಿ ಅಂತಿಮಗೊಳಿಸಲು ನಾಲ್ಕು ವಾರಗಳ ಕಾಲಾವಕಾಶ ಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು.

‘ಈಗಾಗಲೇ ಮೀಸಲಾತಿ ಸಿದ್ಧಪಡಿಸಿ ಸರ್ಕಾರಕ್ಕೆ ರವಾನಿಸಲಾಗಿದೆ. ಶೀಘ್ರದಲ್ಲೇ ಕರಡು ಮೀಸಲಾತಿಯನ್ನು ಹೊರಡಿಸಿ, ಸಾರ್ವಜನಿಕರಿಂದ ಆಕ್ಷೇಪಣೆ ಆಹ್ವಾನಿಸಲಾಗುವುದು. ಬಳಿಕ ಮೀಸಲಾತಿ ಪಟ್ಟಿಯನ್ನು ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಕಳಿಸಿಕೊಡಲಾಗುವುದು’ ಎಂದು ವಿವರಿಸಿದರು.

ರಾಜ್ಯ ಚುನಾವಣಾ ಆಯೋಗದ ಪರ ಹಾಜರಾಗಿದ್ದ ಹಿರಿಯ ವಕೀಲ ಕೆ.ಎನ್.ಫಣೀಂದ್ರ, ‘ಚುನಾವಣೆಗಳು ನಡೆಯದೆ ಬಹಳಷ್ಟು ವಿಳಂಬವಾಗಿದೆ. ಕಳೆದೊಂದು ವರ್ಷದಿಂದ ಮೀಸಲಾತಿ ನಿಗದಿ ನನೆಗುದಿಗೆ ಬಿದ್ದಿದೆ. ಸರ್ಕಾರ ಪುನಃ ಜನವರಿ ತನಕ ಕಾಲಾವಕಾಶ ಕೇಳುತ್ತಿದೆ. ಕನಿಷ್ಠ ಇವತ್ತಿನ ಮನವಿಗಾದರೂ ಬದ್ಧವಾಗಿರುವಂತೆ ಸರ್ಕಾರದ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು’ ಎಂದು ನ್ಯಾಯಪೀಠಕ್ಕೆ ಮನವಿ ಮಾಡಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಡಿಸೆಂಬರ್ 12ಕ್ಕೆ ಮುಂದೂಡಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.