
ಡಿಕೆಶಿ
ಬೆಂಗಳೂರು: ನಾಯಕತ್ವ ಬದಲಾವಣೆ ಇನ್ನೂ ಚರ್ಚೆಯಲ್ಲಿರುವ ಹೊತ್ತಿನಲ್ಲಿಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಪ್ತವಲಯದಲ್ಲಿ ಗುರುತಿಸಿಕೊಂಡಿರುವ 23 ಶಾಸಕರು ಒಂದೆಡೆ ಸೇರಿ ಔತಣಕೂಟ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆ ಹುಟ್ಟುಹಾಕಿದೆ.
ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಹುಟ್ಟುಹಬ್ಬದ ಅಂಗವಾಗಿ ಗುರುವಾರ ಔತಣಕೂಟ ಏರ್ಪಡಿಸಲಾಗಿತ್ತು. ಸಚಿವರಾದ ಡಿ.ಸುಧಾಕರ್, ಮಂಕಾಳ ವೈದ್ಯ, ಶಾಸಕರಾದ ಶಿವಗಂಗಾ ಬಸವರಾಜು, ಎಚ್.ಡಿ. ರಂಗನಾಥ್, ಸಿ.ಪಿ.ಯೋಗೇಶ್ವರ, ನಯನಾ ಮೋಟಮ್ಮ, ಆನೇಕಲ್ ಶಿವಣ್ಣ ಮತ್ತಿತರರು ಭಾಗಿಯಾಗಿದ್ದರು. ವಿಧಾನಪರಿಷತ್ ಸದಸ್ಯ ಎಸ್.ರವಿ ಜತೆ ಇದ್ದರು.
ಅವರ ವೈಯಕ್ತಿಕ ವಿಚಾರ: ಈ ಕುರಿತು ಶುಕ್ರವಾರ ಪ್ರತಿಕ್ರಿಯೆ ನೀಡಿದ ಡಿ.ಕೆ.ಶಿವಕುಮಾರ್, ‘ಬಾಲಕೃಷ್ಣ ಅವರ ಜನ್ಮದಿನಕ್ಕೆ ಹೋಗಿದ್ದಾರೆ. ಯಾವ ಶಕ್ತಿ ಪ್ರದರ್ಶನವೂ ಇಲ್ಲ. ಕೆಲವರು ವಿಶ್ರಾಂತಿ, ಅಧ್ಯಯನಕ್ಕೆ ವಿದೇಶಕ್ಕೆ ಹೋಗುತ್ತಾರೆ. ಕೆಲವರು ದೆಹಲಿಗೆ ಹೋದರೆ, ಮತ್ತೆ ಕೆಲವರು ಭೋಜನಕೂಟ ಸೇರುತ್ತಾರೆ. ಇವೆಲ್ಲ ಅವರ ವೈಯಕ್ತಿಕ ವಿಚಾರ. ಪಕ್ಷಕ್ಕೂ ಇದಕ್ಕೂ ಸಂಬಂಧವಿಲ್ಲ’ ಎಂದರು.
‘ಶಾಸಕರು ದೆಹಲಿಗೆ ಹೋಗಿ ನಿಮ್ಮ ಪರವಾಗಿ ಮನವಿ ಮಾಡುತ್ತಾರಂತಲ್ಲ’ ಎನ್ನುವ ಪ್ರಶ್ನೆಗೆ ಉತ್ತರಿಸಿದ ಅವರು, ‘ದಯವಿಟ್ಟು ಬೇಡ ಎಂದು ಮನವಿ ಮಾಡುತ್ತೇನೆ. ನಿಮ್ಮ ಸಮಸ್ಯೆಗಳು ಇದ್ದರೆ, ಮಂತ್ರಿ ಸ್ಥಾನದ ಆಕಾಂಕ್ಷಿಯಾಗಿದ್ದರೆ, ಅಧಿಕಾರ, ಹುದ್ದೆ ಬೇಕು ಎಂದರೆ ಹೋಗಿ ಮನವಿ ಮಾಡಿಕೊಳ್ಳಿ. ನನ್ನ ವಿಚಾರಕ್ಕೆ ಹೋಗುವುದು ಬೇಡ’ ಎಂದು ಮನವಿ ಮಾಡಿದರು.
‘ಸಿದ್ದರಾಮಯ್ಯ, ಜಿ.ಪರಮೇಶ್ವರ, ಎಚ್.ಕೆ.ಪಾಟೀಲ, ಎಚ್.ಸಿ.ಮಹದೇವಪ್ಪ, ನಾನು ಹಳಬರಾಗಿದ್ದೇವೆ, ಹೊಸಬರು ಸಚಿವರಾಗುವ ಆಸೆ ಹೊಂದಿದ್ದಾರೆ. ಈ ವಿಚಾರವನ್ನು ದೆಹಲಿ ನಾಯಕರ ಗಮನಕ್ಕೆ ತರುತ್ತೇನೆ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.