ಡಿ.ಕೆ ಶಿವಕುಮಾರ್ ಹಾಗೂ ಎಚ್.ಡಿ ಕುಮಾರಸ್ವಾಮಿ
– ಪ್ರಜಾವಾಣಿ ಚಿತ್ರಗಳು
ಬೆಂಗಳೂರು: ‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದರು.
ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ. ಇದರಲ್ಲಿ ಅವಮಾನ ಆಗುವಂತದ್ದು ಏನೂ ಇಲ್ಲ. ಅವರು ಸಿಎಂ ಆಗಿದ್ದಾಗ ನಾನು ಸಾತನೂರಿಗೆ ಚರ್ಚೆಗೆ ಹೋಗಲಿಲ್ಲವೇ’ ಎಂದು ಪ್ರಶ್ನಿಸಿದರು.
ಮುಂದುವರೆದು, ‘ನಾನು ಏನು ಮಾಡಿದ್ದೇನೆ, ನನ್ನ ಹುಳುಕು ಏನಿದೆ ಎಂಬುದನ್ನು ನೀನು ಹೇಳು, ನಿನ್ನದು ಏನಿದೆ ಎಂದು ನಾನು ಹೇಳುತ್ತೇನೆ. ನಂತರ ಜನ ತೀರ್ಮಾನ ಮಾಡುತ್ತಾರೆ’ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದರು.
‘ಎರಡು ವರ್ಷದ ನಂತರ ಇವರು ಸರ್ಕಾರ ರಚಿಸುವುದು ಇರಲಿ, ಜೆಡಿಎಸ್ 7–8 ಸ್ಥಾನಗಳಿಗೆ ಕುಸಿಯುತ್ತದೆ. ಅದನ್ನು ಮೊದಲು ನೋಡಿಕೊಳ್ಳಲಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.