ಬೆಂಗಳೂರು: ಮಹಾತ್ಮಗಾಂಧಿ ಅವರ ಅಧ್ಯಕ್ಷತೆಯ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಆಗಿರುವುದರಿಂದ ರಾಜ್ಯದಾದ್ಯಂತ 100 ನೂತನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ತೀರ್ಮಾನಿಸಿದ್ದು, ಈವರೆಗೂ 50 ಕಡೆಯೂ ಸ್ಥಳ ಅಂತಿಮವಾಗಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಗೊತ್ತಾಗಿದೆ.
ಮುಂದಿನ ತಿಂಗಳು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಂದ 100 ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಬೇಕಾಗಿದೆ. ಹೀಗಾಗಿ ಈ ವೇಳೆಗೆ ಎಲ್ಲ ಕಡೆ ಸಿದ್ಧತೆ ಪೂರ್ಣಗೊಂಡಿರಬೇಕು ಎಂದು ತಾಕೀತು ಮಾಡಿದ್ದಾರೆ ಎಂದೂ ಮೂಲಗಳು ಹೇಳಿವೆ.
100 ಕಚೇರಿ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ದಿನಾಂಕ ನಿಗದಿ ಮಾಡುವಂತೆ ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್ ಗಾಂಧಿ ಅವರಿಗೆ ಕೇಳಿದ್ದೆವು. ಅವರು ಪೂರಕವಾಗಿ ಸ್ಪಂದಿಸಿದ್ದರೂ ಈವರೆಗೂ ಐದು ಸ್ಥಳಗಳೂ ಅಂತಿಮವಾಗಿಲ್ಲ. ಇದು ಉತ್ತಮ ಧೋರಣೆಯಲ್ಲ. ಜಿಲ್ಲಾ ಸಚಿವರು ಜವಾಬ್ದಾರಿ ವಹಿಸಿಕೊಂಡು ಕೂಡಲೇ ಸ್ಥಳ ಗುರುತಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು ಎಂದು ತಿಳಿದುಬಂದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.