
ಬೆಂಗಳೂರು: ‘ಸೋಲುವ ಭಯದಲ್ಲಿ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಅವರು ಕಾಂಗ್ರೆಸ್ ವಿರುದ್ಧ ಆಧಾರರಹಿತ ಹೇಳಿಕೆ ನೀಡುತ್ತಿದ್ದಾರೆ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದರು.
ಚುನಾವಣೆ ಪ್ರಚಾರಕ್ಕೆ ಅಸ್ಸಾಂಗೆ ತೆರಳಿರುವ ಅವರು ಗುವಾಹಟಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದರು.
‘ಕಾಂಗ್ರೆಸ್ ವಿರುದ್ಧ ಪಾಕಿಸ್ತಾನ ವಿಚಾರವಾಗಿ ಹಿಮಂತ ಬಿಸ್ವ ಶರ್ಮ ಆರೋಪ ಮಾಡುತ್ತಿದ್ದಾರಲ್ಲವೇ’ ಎಂದು ಕೇಳಿದಾಗ, ‘ಅವರು ದುರ್ಬಲರಾಗಿದ್ದಾರೆ. ಹೀಗಾಗಿ ಇಂತಹ ಹೇಳಿಕೆ ನೀಡುತ್ತಿದ್ದಾರೆ. ಅವರಿಗೆ ತಮ್ಮ ಕೆಲಸಗಳ ಬಗ್ಗೆ ಆತ್ಮವಿಶ್ವಾಸ ಇಲ್ಲ. ತಮ್ಮ ಬದ್ಧತೆಯ ಬಗ್ಗೆಯೇ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಬಾರಿ ಚುನಾವಣೆಯಲ್ಲಿ ಅವರ ಪಕ್ಷ ಸೋಲಲಿದೆ. ಹೀಗಾಗಿ ಹೀಗೆ ಮಾತನಾಡುತ್ತಿದ್ದಾರೆ’ ಎಂದರು.
‘ನಾನು ಮೊದಲು ಕಾಮಾಕ್ಯ ದೇವಾಲಯಕ್ಕೆ ಹೋಗಿ ಈ ರಾಜ್ಯದಲ್ಲಿ ಬದಲಾವಣೆ ತರುವಂತೆ ತಾಯಿ ಬಳಿ ಪ್ರಾರ್ಥಿಸಿದ್ದೇನೆ’ ಎಂದು ತಿಳಿಸಿದರು.
ಕಾಮಾಕ್ಯ ದೇವಾಲಯಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಜೊತೆ ತೆರಳಿ ಡಿ.ಕೆ. ಶಿವಕುಮಾರ್ ಪೂಜೆ ಸಲ್ಲಿಸಿದರು.
ಗುವಾಹಟಿಯಲ್ಲಿ ನಡೆದ ಪ್ರದೇಶ ಕಾಂಗ್ರೆಸ್ ಪದಾಧಿಕಾರಿಗಳು ಹಾಗೂ ಬ್ಲಾಕ್ ಅಧ್ಯಕ್ಷರ ಸಮಾವೇಶದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ, ಡಿ.ಕೆ. ಶಿವಕುಮಾರ್, ಅಸ್ಸಾಂ ಪಿಸಿಸಿ ಅಧ್ಯಕ್ಷ ಗೌರವ್ ಗೊಗೊಯಿ, ಛತ್ತೀಸಗಡ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.